ನವದೆಹಲಿ: ಪರಿಶಿಷ್ಟ ಜಾತಿ ಮತ್ತು ಪಂಗಡದ ನೌಕರರಿಗೆ ಬಡ್ತಿಯಲ್ಲಿ ಮೀಸಲಾತಿ ನೀಡುವ ರಾಜ್ಯ ಸರ್ಕಾರದ ನೂತನ ಕಾಯ್ದೆಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿರುವ ರಿಟ್ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದಿನ ವಾರಕ್ಕೆ ಮುಂದೂಡಿದೆ.
ನ್ಯಾಯಮೂರ್ತಿಗಳಾದ ಆದರ್ಶಕುಮಾರ್ ಗೋಯಲ್ ಹಾಗೂ ಎಸ್.ನಜೀರ್ ಅಹಮದ್ ನೇತೃತ್ವದ ದ್ವಿಸದಸ್ಯ ಪೀಠದೆದುರು ಬುಧವಾರ ಪ್ರಕರಣದ ವಿಚಾರಣೆ ನಿಗದಿಯಾಗಿತ್ತು. ನ್ಯಾಯಮೂರ್ತಿ ಗೋಯಲ್ ಅವರು ಇದೇ 6ರಂದು ನಿವೃತ್ತರಾಗಲಿದ್ದು, ಈ ಮೇಲ್ಮನವಿಯ ವಿಚಾರಣೆಯನ್ನು ಬೇರೆ ಪೀಠ ನಡೆಸಲಿದೆ.
ರಾಜ್ಯ ಸರ್ಕಾರದ 2002ರ ಬಡ್ತಿ ಮೀಸಲಾತಿ ಕಾಯ್ದೆಯನ್ನು ರದ್ದುಪಡಿಸಿ 2017ರ ಫೆಬ್ರುವರಿ 9ರಂದು ಸುಪ್ರೀಂ ಕೋರ್ಟ್ ನೀಡಿದ್ದ ಆದೇಶ ಪಾಲಿಸಿಲ್ಲ ಎಂದು ದೂರಿ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ನಡೆಸುತ್ತಿ ರುವ ನ್ಯಾಯಮೂರ್ತಿಗಳಾದ ಗೋಯಲ್ ಹಾಗೂ ಯು.ಯು. ಲಲಿತ್ ನೇತೃತ್ವದ ವಿಶೇಷ ಪೀಠ ಪ್ರಕರಣದ ವಿಚಾರಣೆ ಕೈಗೆತ್ತಿಕೊಳ್ಳದೆ ಮುಂದೂಡಲು ನಿರ್ಧರಿಸಿತು.
ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ನಿಗದಿಯಾಗಿದ್ದ ಕಾರಣ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಹಾಜರಾಗಿದ್ದರು.