ರಾಂಚಿ: ಪ್ರವಾದಿ ಮಹಮ್ಮದ್ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದ ನೂಪುರ್ ಶರ್ಮಾ ಅವರನ್ನು ಬಂಧಿಸುವಂತೆ ಆಗ್ರಹಿಸಿ ಶುಕ್ರವಾರ ನಡೆದ ಪ್ರತಿಭಟನೆಯ ವೇಳೆ ಕಲ್ಲು ತೂರಾಟ ನಡೆದಿದ್ದು, ಪೊಲೀಸರು ಸೇರಿ ಹಲವು ಜನರು ಗಾಯಗೊಂಡಿದ್ದಾರೆ. ಅದರ ಬೆನ್ನಲ್ಲೇ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಬಿಜೆಪಿಯಿಂದ ಅಮಾನತುಗೊಂಡಿರುವ ಪಕ್ಷದ ರಾಷ್ಟ್ರೀಯ ವಕ್ತಾರೆಯಾಗಿದ್ದ ನೂಪುರ್ ಶರ್ಮಾ ಅವರನ್ನು ಬಂಧಿಸುವಂತೆ ಇಂದು ದೇಶದ ಹಲವು ಭಾಗಗಳಲ್ಲಿ ಪ್ರತಿಭಟನೆ ನಡೆಸಲಾಗಿದೆ. ಮುಸ್ಲಿಮ್ ಸಮುದಾಯದವರು ಶುಕ್ರವಾರದ ಪ್ರಾರ್ಥನೆಯ ಬಳಿಕ ರಸ್ತೆಗಿಳಿದು ಸಾಮೂಹಿಕ ಪ್ರತಿಭಟನೆ ನಡೆಸಿದ್ದಾರೆ. ರಾಂಚಿಯಲ್ಲಿ ರಸ್ತೆಗಿಳಿದ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದರು ಮತ್ತು ಗಾಳಿಯಲ್ಲಿ ಗುಂಡು ಹಾರಿಸಿದರು.
ಪ್ರತಿಭಟನಾಕಾರರು ಘೋಷಣೆಗಳನ್ನು ಜೋರು ಮಾಡಿ, ಪೊಲೀಸರತ್ತ ಕಲ್ಲು ತೂರಿದರು.
— Pramod Kumar Singh (@SinghPramod2784) June 10, 2022
ಗಲಭೆ ನಡೆದ ಹನುಮಾನ್ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶದಲ್ಲಿ ಸಿಆರ್ಪಿಸಿ ಸೆಕ್ಷನ್ 144ರ ಅಡಿಯಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ. 'ನಿಷೇಧಾಜ್ಞೆಯು ಆಲ್ಬರ್ಟ್ ಎಕ್ಕಾ ಚೌಕದಿಂದ ಸುಜಾತಾ ಚೌಕದವರೆಗೂ 500 ಮೀಟರ್ ವ್ಯಾಪ್ತಿಗೆ ಅನ್ವಯವಾಗಲಿದೆ' ಎಂದು ರಾಂಚಿಯ ಜಿಲ್ಲಾಧಿಕಾರಿ ಛಾವಿ ರಂಜನ್ ಹೇಳಿದ್ದಾರೆ.