ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶುಕ್ರವಾರ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರನ್ನು ಭೇಟಿ ಮಾಡಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದರು.
ಮೋದಿ ಉಪನಾಮ ಸಂಬಂಧ ತಾವು ನೀಡಿದ್ದ ಹೇಳಿಕೆಗೆ ಕೆಳ ನ್ಯಾಯಾಲಯ ವಿಧಿಸಿದ್ದ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ ಕೆಲವೇ ಗಂಟೆಗಳಲ್ಲಿ ಲಾಲು ಅವರನ್ನು ರಾಹುಲ್ ಗಾಂಧಿ ಭೇಟಿ ಮಾಡಿದರು.
ಆರ್ಜೆಡಿ ಸಂಸದೆ ಮೀಸಾ ಭಾರತಿ ಅವರ ನಿವಾಸಲ್ಲಿ ಇವರಿಬ್ಬರ ಭೇಟಿ ನಡೆಯಿತು. ಈ ವೇಳೆ ಲಾಲು ಪ್ರಸಾದ್ ಅವರ ಪುತ್ರ ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಕೂಡ ಹಾಜರಿದ್ದರು.
ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ರಾಹುಲ್ ಗಾಂಧಿ ಅವರ ಜತೆಗಿದ್ದರು.
ಪರಸ್ಪರ ತಬ್ಬಿಕೊಂಡು ಶುಭಾಶಯ ವಿನಿಮಯ ಮಾಡಿಕೊಂಡ ನಾಯಕರು, ಸದ್ಯದ ರಾಜಕೀಯ ಪರಿಸ್ಥಿತಿ ಹಾಗೂ ಇಂಡಿಯಾ ಮೈತ್ರಿಕೂಟದ ಬಗ್ಗೆ ಚರ್ಚೆ ನಡೆಸಿದರು. ಇದೇ ವೇಳೆ ಲಾಲು ಅವರ ಆರೋಗ್ಯವನ್ನೂ ರಾಹುಲ್ ಗಾಂಧಿ ಅವರು ವಿಚಾರಿಸಿದರು.
ಬಿಹಾರದಲ್ಲಿ ಆರ್ಜೆಡಿ, ಕಾಂಗ್ರೆಸ್ ಹಾಗೂ ಎಡಪಕ್ಷಗಳು ಮೈತ್ರಿ ಮಾಡಿಕೊಂಡು ಸರ್ಕಾರದ ಭಾಗವಾಗಿವೆ. ಮಾತುಕತೆ ವೇಳೆ ಬಿಹಾರದ ರಾಜಕೀಯದ ಬಗ್ಗೆ ಚರ್ಚೆಗಳು ನಡೆದವು ಎಂದು ಗೊತ್ತಾಗಿದೆ.
ಈ ಮಾಸಾಂತ್ಯದಲ್ಲಿ ಮುಂಬೈನಲ್ಲಿ ಇಂಡಿಯಾ ಒಕ್ಕೂಟದ ಮೂರನೇ ಸಭೆ ನಡೆಯಲಿದ್ದು, ಅದಕ್ಕೂ ಮುನ್ನ ಇವರಿಬ್ಬರ ಭೇಟಿ ಮಹತ್ವದೆನಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.