ನವದೆಹಲಿ: ಲೋಕಸಭಾ ಸದಸ್ಯತ್ವ ಪುನಃಸ್ಥಾಪನೆಯಾದ ಬಳಿಕ ಮೊದಲ ಬಾರಿಗೆ ಸೋಮವಾರ ಲೋಕಸಭೆಗೆ ಆಗಮಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಕಾಂಗ್ರೆಸ್ ಸದಸ್ಯರು ಹಾಗೂ ವಿರೋಧ ಪಕ್ಷಗಳ ಸದಸ್ಯರಿಂದ ಆತ್ಮೀಯ ಸ್ವಾಗತ ಲಭಿಸಿತು.
ಮಧ್ಯಾಹ್ನ ಸುಮಾರು 12 ಗಂಟೆ ವೇಳೆಗೆ ರಾಹುಲ್ ಗಾಂಧಿ ಅವರು ಸಂಸತ್ ಸಂಕೀರ್ಣದ ಬಳಿ ತಲುಪಿದರು. ಅದಕ್ಕೂ ಮುನ್ನ ರಾಜ್ಘಾಟ್ಗೆ ತೆರಳಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಸಮಾಧಿಗೆ ಪುಷ್ಪನಮನ ಸಲ್ಲಿಸಿದರು.
ಲೋಕಸಭೆಗೆ ಪ್ರವೇಶಿಸುತ್ತಿದ್ದಂತೆಯೇ, ಕಾಂಗ್ರೆಸ್ ಸದಸ್ಯರೂ ಸೇರಿ ‘ಇಂಡಿಯಾ’ ಮೈತ್ರಿಕೂಟದ ಸದದ್ಯರು ಘೋಷಣೆಗಳನ್ನು ಕೂಗಿ ರಾಹುಲ್ ಗಾಂಧಿ ಅವರನ್ನು ಸದನಕ್ಕೆ ಬರಮಾಡಿಕೊಂಡರು.
ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿ ತಪ್ಪಿತಸ್ಥ ಎಂದು ಆದೇಶಿಸಿದ್ದ ಗುಜರಾತ್ನ ಸೂರತ್ ನ್ಯಾಯಾಲಯ, ಮಾರ್ಚ್ 23ರಂದು 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಇದರ ಬೆನ್ನಲ್ಲೇ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿತ್ತು.
ಸೂರತ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ರಾಹುಲ್ ಗಾಂಧಿ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಶುಕ್ರವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಶಿಕ್ಷೆಗೆ ತಡೆ ನೀಡಿತ್ತು.
ರಾಹುಲ್ ಗಾಂಧಿ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.
ಓದಿ... ಈ 10 ಪ್ರಶ್ನೆಗಳಿಗೆ ಉತ್ತರಿಸಿ: ಪ್ರಧಾನಿ ಮೋದಿಗೆ ಕಾಂಗ್ರೆಸ್ ಸವಾಲು