ನವದೆಹಲಿ: ಭಾರಿ ಮಳೆಯಿಂದಾಗಿ ಉತ್ತರ ಭಾರತ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ರೈಲುಗಳ ಸಂಚಾರ ವ್ಯತ್ಯಯವಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿವೈಷ್ಣವ್ ಮಂಗಳವಾರ ಸಭೆ ನಡೆಸಿ ಪರ್ಯಾಲೋಚಿಸಿದರು.
ಈ ಸಂಬಂಧ ‘ರೇಲ್ ಭವನ’ದಲ್ಲಿ ಸ್ಥಾಪಿಸಿರುವ ನಿಯಂತ್ರಣ ಕೊಠಡಿಗೆ ಭೇಟಿ ನೀಡಿದ ಸಚಿವ ವೈಷ್ಣವ್, ಪರಿಸ್ಥಿತಿ ಎದುರಿಸಲು ಮಾಡಿಕೊಂಡಿರುವ ಸಿದ್ಧತೆಗಳನ್ನು ಪರಿಶೀಲಿಸಿದರು.
‘ಸಚಿವರು ವಿವಿಧ ರೈಲ್ವೆ ವಲಯಗಳ ಉನ್ನತ ಅಧಿಕಾರಿಗಳೊಂದಿಗೆ ವರ್ಚುವಲ್ಆಗಿ ಸಭೆ ನಡೆಸಿ, ಮಾಹಿತಿ ಪಡೆದರು’ ಎಂದು ರೈಲ್ವೆ ವಕ್ತಾರ ತಿಳಿಸಿದ್ದಾರೆ.
ಮುನ್ನೆಚ್ಚರಿಕೆ ಕ್ರಮವಾಗಿ ಜಮ್ಮು, ಪಂಜಾಬ್, ಹರಿಯಾಣ ಮತ್ತು ಉತ್ತರಾಖಂಡಕ್ಕೆ ಸಂಪರ್ಕಿಸುವ ಹಲವು ರೈಲುಗಳ ಸಂಚಾರವನ್ನು ರದ್ದುಪಡಿಸಲಾಗಿದೆ.