ಲಖನೌ: ‘ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ 80 ಕ್ಷೇತ್ರಗಳಲ್ಲೂ ಬಿಜೆಪಿ ನೇತೃತ್ವದ ಎನ್ಡಿಎ ಜಯ ಸಾಧಿಸಲಿದೆ’ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಮೈತ್ರಿ ಮಾಡಿಕೊಳ್ಳುವ ನಿಟ್ಟಿನಲ್ಲಿ ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷಗಳು ವಿಫಲವಾಗಿವೆ. ಹೀಗಾಗಿ ರಾಜ್ಯದಲ್ಲಿ ಖಾತೆ ತೆರೆಯಲು ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟ ಪರದಾಡುತ್ತಿದೆ’ ಎಂದಿದ್ದಾರೆ.
‘ಇವರಿಬ್ಬರ ಒಪ್ಪಂದವು ಎರಡು ಕ್ಷೇತ್ರಗಳ ಹಂಚಿಕೆ ಕುರಿತಂತೆ ಮುರಿದುಬಿದ್ದಿದೆ. ಕಾಂಗ್ರೆಸ್ಗೆ ಸ್ಪರ್ಧಿಸಲು ಮನಸ್ಸಿದ್ದರೂ, ಸಮಾಜವಾಧಿ ಪಕ್ಷ ಅದಕ್ಕೆ ಅವಕಾಶ ನೀಡುತ್ತಿಲ್ಲ. ರಾಹುಲ್ ಗಾಂಧಿ ಅವರ ಭಾರತ್ ಜೋಡೊ ನ್ಯಾಯ ಯಾತ್ರೆಯಲ್ಲಿ ಪಾಲ್ಗೊಳ್ಳಬೇಕೆಂದರೆ ಸೀಟು ಹಂಚಿಕೆ ಚರ್ಚೆ ಮುಗಿಯಬೇಕು ಎಂದು ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಷರತ್ತು ವಿಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ’ ಎಂದು ರಾಜನಾಥ ಸಿಂಗ್ ಹೇಳಿದರು.
‘ಲಖನೌದಲ್ಲಿ ನಿರ್ಮಾಣ ಹಂತದಲ್ಲಿರುವ 8 ಪಥದ 104 ಕಿ.ಮೀ. ಉದ್ದದ ವರ್ತುಲ ರಸ್ತೆಯ ಕಾಮಗಾರಿ ಮಾರ್ಚ್ ಮೊದಲ ವಾರದಲ್ಲಿ ಪೂರ್ಣಗೊಳ್ಳಲಿದೆ. ಇದರೊಂದಿಗೆ 13 ಮೇಲ್ಸೇತುವೆಗಳ ನಿರ್ಮಾಣ ಪೂರ್ಣಗೊಂಡಿದೆ. ಇನ್ನೂ 10 ಮೇಲ್ಸೇತುವೆಗಳ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ’ ಎಂದು ತಿಳಿಸಿದರು.
‘ಅಭಿವೃದ್ಧಿ ಕಾರ್ಯಗಳನ್ನು ಚುನಾವಣೆಯೊಂದಿಗೆ ಸಮೀಕರಿಸಬಾರದು. ಪ್ರತಿಯೊಬ್ಬ ಜನಪ್ರತಿನಿಧಿಯೂ ತನ್ನ ಕ್ಷೇತ್ರದ ಜನರ ಸಮಸ್ಯೆ ಎದುರಿಸಲು ಬದ್ಧರಾಗಿರಬೇಕು. ಆ ಮೂಲಕ ತನ್ನ ಕರ್ತವ್ಯವನ್ನು ಪೂರ್ಣಗೊಳಿಸಬೇಕು. ನಾನು ನನ್ನ ಸಾಮರ್ಥ್ಯದಲ್ಲಿ ಗರಿಷ್ಠ ಪ್ರಮಾಣದಲ್ಲಿ ಜನರ ಕೆಲಸವನ್ನು ಮಾಡಿದ ತೃಪ್ತಿ ನನಗಿದೆ’ ಎಂದು ರಾಜನಾಥ ಸಿಂಗ್ ತಿಳಿಸಿದರು.