ಅಯೋಧ್ಯೆ: ಇಂದು ನಡೆಯಲಿರುವ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಉತ್ತರ ಪ್ರದೇಶದ ಅಯೋಧ್ಯೆ ನಗರ ಸಡಗರದಿಂದ ಸಜ್ಜಾಗಿದ್ದು, ಸಂಭ್ರಮ ಮನೆ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ, ಸಾಧು ಸಂತರು, ಪ್ರಮುಖ ಕೈಗಾರಿಕೋದ್ಯಮಿಗಳು, ಬಾಲಿವುಡ್ ತಾರೆಯರು ಸೇರಿದಂತೆ ಸುಮಾರು ಎಂಟು ಸಾವಿರ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಬಾಲರಾಮನ ಪ್ರಾಣ ಪ್ರತಿಷ್ಠಾಪನೆಯ ಕಾರ್ಯಕ್ರಮದಲ್ಲಿ ದೇಶದ ವಿವಿಧ ಭಾಗಗಳ 14 ದಂಪತಿ ‘ಯಜಮಾನ’ರಾಗಿ ಪಾಲ್ಗೊಳ್ಳಲಿದ್ದಾರೆ. ಕರ್ನಾಟಕದ ಲಿಂಗರಾಜ ಬಸವರಾಜ ಅವರು ಯಜಮಾನರಾಗಿ ಪತ್ನಿಯೊಂದಿಗೆ ಭಾಗಿಯಾಗಲಿದ್ದಾರೆ.
ರಾಮ ಮಂದಿರ ಸುತ್ತಮುತ್ತ ಸೇರಿದಂತೆ ಅಯೋಧ್ಯೆ ನಗರದಲ್ಲಿ ಭಾರಿ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ.
ಇಂದಿನ ಕಾರ್ಯಕ್ರಮಗಳು
ಪ್ರಾಣ ಪ್ರತಿಷ್ಠಾಪನೆಯ ಶುಭ ಮುಹೂರ್ತ ಇರುವುದು 84 ಸೆಕೆಂಡುಗಳಷ್ಟು ಮಾತ್ರ. ಅದು 12 ಗಂಟೆ 29 ನಿಮಿಷ 8 ಸೆಕೆಂಡುಗಳಿಂದ 12 ಗಂಟೆ 30 ನಿಮಿಷ 32 ಸೆಕೆಂಡುಗಳವರೆಗೆ ಇರಲಿದೆ
ಪ್ರಾಣ ಪ್ರತಿಷ್ಠಾಪನೆಗೆ ಸಂಬಂಧಿಸಿದ ಕಾರ್ಯಕ್ರಮವು 12.20ರಿಂದ 12.45ರವರೆಗೆ ನಡೆಯಲಿದೆ.
ಮಹಾವಿಷ್ಣುವಿನ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಶುರುವಾಗಲಿದೆ
ಪುರೋಹಿತರು ಮಂತ್ರಗಳ ಮೂಲಕ ಶ್ರೀರಾಮನನ್ನು ಆವಾಹನೆ ಮಾಡುತ್ತಾರೆ
ಗರ್ಭಗೃಹದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆಗೆ ಸಂಬಂಧಿಸಿದ ವಿಧಿವಿಧಾನಗಳು ನಡೆಯುತ್ತವೆ
ಧಾರ್ಮಿಕ ವಿಧಿವಿಧಾನಗಳನ್ನು 121 ಮಂದಿ ವೈದಿಕ ವಿದ್ವಾಂಸರು, ಆಚಾರ್ಯ ಗಣೇಶ್ವರ ದ್ರಾವಿಡ್ ಮತ್ತು ಆಚಾರ್ಯ ಲಕ್ಷ್ಮೀಕಾಂತ ದ್ವಿವೇದಿ ಮಾರ್ಗದರ್ಶನದಲ್ಲಿ ನಡೆಸಲಿದ್ದಾರೆ
ಪ್ರಾಣ ಪ್ರತಿಷ್ಠಾಪನೆಯ ನಂತರದಲ್ಲಿ, ಅಯೋಧ್ಯೆಯಲ್ಲಿ ಸೋಮವಾರ ಸಂಜೆ ದೀಪೋತ್ಸವ ನಡೆಯಲಿದೆ. ಒಟ್ಟು ಹತ್ತು ಲಕ್ಷ ಹಣತೆಗಳನ್ನು ಬೆಳಗಿಸಲಾಗುತ್ತದೆ