ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮ ಪ್ರಾಣ ಪ್ರತಿಷ್ಠಾಪನೆ: ಯಾವ ಯಾವ ರಾಜಕೀಯ ನಾಯಕರು ಭಾಗವಹಿಸುತ್ತಿಲ್ಲ?

Published 17 ಜನವರಿ 2024, 13:56 IST
Last Updated 17 ಜನವರಿ 2024, 13:56 IST
ಅಕ್ಷರ ಗಾತ್ರ

ನವದೆಹಲಿ: ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಲಿದೆ. ಈಗಾಗಲೇ ಸಕಲ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ನಾಡಿನ ಗಣ್ಯರು ಸೇರಿದಂತೆ ವಿದೇಶಗಳ ನಾಯಕರು ಭಾಗವಹಿಸುತ್ತಿದ್ದಾರೆ. 

ಆ ದಿನ ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಯಲ್ಲಿ ಉಳಿಯಲಿದ್ದು ಇಡೀ ದಿನದ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ. ಬಹುತೇಕ ಎನ್‌ಡಿಎ ಮೈತ್ರಿಕೂಟದ ಎಲ್ಲಾ ರಾಜಕೀಯ ನಾಯಕರು ಈ ಸಮಾರಂಭದಲ್ಲಿ ಭಾಗವಹಿಸುತ್ತಿದ್ದಾರೆ. ಇನ್ನು ಕಾಂಗ್ರೆಸ್ ಸೇರಿದಂತೆ ಇಂಡಿಯಾ ಮೈತ್ರಿಕೂಟದ ವಿವಿಧ ಪಕ್ಷಗಳ ನಾಯಕರು ಜನವರಿ 22ರಂದು ಭಾಗವಹಿಸುತ್ತಿಲ್ಲ, ಇವರು ಬೇರೆ ದಿನ ಅಯೋಧ್ಯೆಗೆ ಭೇಟಿ ನೀಡುವುದಾಗಿ ಹೇಳುತ್ತಿದ್ದಾರೆ.

ಯಾವ ರಾಜಕೀಯ ನಾಯಕರು ಭಾಗವಹಿಸುತ್ತಿಲ್ಲ ಎಂಬುದರ ಮಾಹಿತಿ ಇಲ್ಲಿದೆ...

  • ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರನ್ನು ಹೊರತುಪಡಿಸಿದರೆ ಬಿಜೆಪಿಯ ಯಾವ ಮುಖ್ಯಮಂತ್ರಿಯೂ ಕೂಡ ಭಾಗವಹಿಸುತ್ತಿಲ್ಲ ಎಂದು ರಾಮಮಂದಿರ ಟ್ರಸ್ಟ್‌ ಮೂಲಗಳು ಖಚಿತ ಪಡಿಸಿವೆ. 

  • ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ಅವರು ಸಹ ಭಾಗವಹಿಸುತ್ತಿಲ್ಲ. ಇವರು ಈಗಾಗಲೇ ಬೇರೆ ದಿನ ಅಯೋಧ್ಯೆಗೆ ಭೇಟಿ ನೀಡುವುದಾಗಿ ಹೇಳಿದ್ದಾರೆ. ರಾಹುಲ್‌ ಗಾಂಧಿ ಭಾರತ್‌ ಜೊಡೊ ನ್ಯಾಯ ಯಾತ್ರೆಯಲ್ಲಿ ಇದ್ದಾರೆ. ಅವರು ಜನವರಿ 22ರಂದು ಅಸ್ಸಾಂ ರಾಜ್ಯದಲ್ಲಿ ಇರುವುದರಿಂದ ಆ ದಿನ ಅಲ್ಲಿನ ಸ್ಥಳೀಯ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ. 

  • ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಟಿಎಂಸಿ ಹಿರಿಯ ನಾಯಕರು ಇದರಲ್ಲಿ ಭಾಗವಹಿಸುವುದಿಲ್ಲ. ಆ ದಿನ ಮಮತಾ ಬ್ಯಾನರ್ಜಿ ಅವರು ಕಾಳಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಮಾಡಲಿದ್ದಾರೆ.

  • ಎನ್‌ಸಿಪಿ ಮುಖಂಡ ಶರದ್ ಪವಾರ್ ಹಾಗೂ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ಅವರು ಸಹ ರಾಮ ಪ್ರಾಣ ಪ್ರತಿಷ್ಠಾಪನೆ ದಿನ ಭಾಗವಹಿಸುತ್ತಿಲ್ಲ ಎಂದು ಹೇಳಿದ್ದಾರೆ. ರಾಮಮಂದಿರ ಪೂರ್ಣವಾಗಿ ನಿರ್ಮಾಣವಾದ ಮೇಲೆ ಭೇಟಿ ನೀಡುವುದಾಗಿ ಹೇಳಿದ್ದಾರೆ. 

  • ಎಎಪಿ ನಾಯಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ಕೂಡ ಜನವರಿ 22ರಂದು ಭಾಗವಹಿಸುತ್ತಿಲ್ಲ. ಅವರು ಆ ದಿನ ದೆಹಲಿಯಾದ್ಯಂತೆ ನಡೆಯಲಿರುವ ಹನುಮಾನ್ ಚಾಲೀಸ ಪಠಣ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವುದಾಗಿ ಘೋಷಣೆ ಮಾಡಿದ್ದಾರೆ. 

  • ಮಹಾರಾಷ್ಟ್ರದ ಶಿವಸೇನೆ(ಯುಬಿಟಿ)ಯ ಯಾವೊಬ್ಬ ನಾಯಕರು ಕೂಡ ಅಂದು ಅಯೊಧ್ಯೆ ಸಮಾರಂಭದಲ್ಲಿ ಭಾಗವಹಿಸುತ್ತಿಲ್ಲ. ಉದ್ದವ್‌ ಠಾಕ್ರೆ ಅವರು ಆ ದಿನ ನಾಸಿಕ್‌ನಲ್ಲಿರುವ ರಾಮನ ದೇವಾಲಯದಲ್ಲಿ ಮಹಾ ಆರತಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ. 

  • * ಲಾಲು ಪ್ರಸಾದ್‌ ಯಾದವ್, ಡಿಎಂಕೆ, ಎಡಪಕ್ಷಗಳು ಗೈರು...ಬಿಹಾರದ ಆಡಳಿತಾರೂಢ ಮೈತ್ರಿಕೂಟದ ಭಾಗವಾಗಿರುವ ಆರ್‌ಜೆಡಿ ವರಿಷ್ಠ ಲಾಲು ಪ್ರಸಾದ್‌ ಯಾದವ್‌ ಕೂಡ ಜನವರಿ 22ರಂದು ಭಾಗವಹಿಸುತ್ತಿಲ್ಲ. ಮುಂದಿನ ದಿನಗಳಲ್ಲಿ ರಾಮಮಂದಿರಕ್ಕೆ ಭೇಟಿ ಕೊಡುತ್ತೇನೆ ಎಂದು ಹೇಳಿದ್ದಾರೆ. ಈಗಾಗಲೇ ಎಡಪಕ್ಷಗಳು ಮತ್ತು ತಮಿಳುನಾಡಿನ ಡಿಎಂಕೆ ನಾಯಕರು ನಾವು ಧಾರ್ಮಿಕ ನಂಬಿಕೆಗಳನ್ನು ಗೌರವಿಸುತ್ತೇವೆ. ಆದರೆ ಬಿಜೆಪಿ ಧಾರ್ಮಿಕ ಕಾರ್ಯಕ್ರಮದಲ್ಲಿ ರಾಜಕೀಯ ಸೇರಿಸಿದೆ. ಈ ಹಿನ್ನೆಲೆಯಲ್ಲಿ ನಾವು ರಾಮ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಭಾಗವಹಿಸುತ್ತಿಲ್ಲ ಎಂದು ಹೇಳಿವೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT