ನವದೆಹಲಿ: ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಅವರು ಆಯ್ಕೆಯಾಗಿದ್ದಾರೆ.
ದೆಹಲಿಯಲ್ಲಿ ನಡೆದ ಕಾಂಗ್ರೆಸ್ ವರಿಷ್ಠರ ಸಭೆಯ ಬಳಿಕ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ರೇವಂತ್ ರೆಡ್ಡಿ ಅವರ ಹೆಸರು ಘೋಷಿಸಿದರು. ಈ ಕುರಿತು ಕಾಂಗ್ರೆಸ್ X ತಾಣದಲ್ಲಿ ಮಾಹಿತಿ ಹಂಚಿಕೊಂಡಿದೆ.
‘ರೇವಂತ್ ರೆಡ್ಡಿ ಅವರು ತೆಲಂಗಾಣದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದು, ಹೊಸ ಸಿಎಂ ಆಗಿ ಡಿಸೆಂಬರ್ 7 ರಂದು ಗುರುವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಂತಿಮ ತೀರ್ಮಾನ ಕೈಗೊಂಡರು’ ಎಂದು ವೇಣುಗೋಪಾಲ್ ತಿಳಿಸಿದ್ದಾರೆ.
ಪ್ರಸ್ತುತ ರೇವಂತ್ ರೆಡ್ಡಿ ಅವರು 2021 ರಿಂದ ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರೂ ಹೌದು. ತೆಲಂಗಾಣ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಿರುವ ಅನುಮೂಲ ರೇವಂತ್ ರೆಡ್ಡಿ ಅವರಿಗೆ ಸೂಕ್ತ ಗೌರವ ಸಿಕ್ಕಿದೆ. ರೇವಂತ್ ಅವರಿಗೆ ಸಿಎಂ ಅಭ್ಯರ್ಥಿಯಾಗಿ ಪ್ರಬಲ ಸ್ಪರ್ಧೆ ಇರದಿದ್ದರಿಂದ ಅವರ ಆಯ್ಕೆ ಸರಳವಾಯಿತು ಎಂಬ ಮಾತುಗಳು ಕೇಳಿ ಬಂದಿವೆ.