ತಿರುವನಂತಪುರ: ಕೇಂದ್ರ ಸರ್ಕಾರವು ರಾಜ್ಯದ ಮೇಲೆ ಆರ್ಥಿಕ ನಿರ್ಬಂಧಗಳನ್ನು ಹೇರುತ್ತಿದೆ ಎಂದು ಕೇರಳದ ಆಡಳಿತಾರೂಢ ಸಿಪಿಐ(ಎಂ) ಆರೋಪಿಸಿದೆ. ಅಲ್ಲದೇ ಈ ಬಗ್ಗೆ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಸೆ. 11 ರಿಂದ ರಾಜ್ಯದಾದ್ಯಂತ ಭಾರೀ ಪ್ರತಿಭಟನೆ ನಡೆಸುವುದಾಗಿಯೂ ಹೇಳಿದೆ.
ಇಲ್ಲಿ ನಡೆದ ರಾಜ್ಯ ಸಮಿತಿ ಸಭೆಯಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ, ಸಿಪಿಐ(ಎಂ)ನ ರಾಜ್ಯ ಕಾರ್ಯದರ್ಶಿ ಎಂ.ವಿ ಗೋವಿಂದನ್, ಕೇಂದ್ರದ ಹಣಕಾಸು ನೀತಿಯ ವಿರುದ್ಧ ಸೆಪ್ಟೆಂಬರ್ 11ರಿಂದ ರಾಜದಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.
ಇದೇ ವೇಳೆ ವಿರೋಧ ಪಕ್ಷಗಳ ಒಕ್ಕೂಟ ಕಾಂಗ್ರೆಸ್ ನೇತೃತ್ವದ ಯುಡಿಎಫ್ ವಿರುದ್ಧವೂ ಹರಿಹಾಯ್ದಿರುವ ಅವರು, ಜನರ ಸಮಸ್ಯೆಗಳ ಬಗ್ಗೆ ಅವರು ಮೌನವಾಗಿದ್ದಾರೆ. ಅವರ ವಿರುದ್ಧವೂ ಪ್ರತಿಭಟನೆ ನಡೆಯಲಿದೆ ಎಂದು ಹೇಳಿದರು.
ಕೇಂದ್ರ ಬಿಜೆಪಿ ಸರ್ಕಾರ ಹಾಗೂ ರಾಜ್ಯದ ವಿರೋಧ ಪಕ್ಷ ಯುಡಿಎಫ್ ಮೈತ್ರಿಕೂಟ ಜನರ ಸಮಸ್ಯೆಗಳ ಬಗ್ಗೆ ಮಾತನಾಡುತ್ತಿಲ್ಲ. ಅದರ ಬದಲು ಎಲ್ಲದಕ್ಕೂ ಎಡರಂಗ ಸರ್ಕಾರವನ್ನೇ ದೂಷಿಸುತ್ತಿದ್ದಾರೆ. ಇದು ಅವರ ರಾಜಕೀಯ ತಂತ್ರಗಾರಿಕೆ. ರಾಜ್ಯವನ್ನು ಆರ್ಥಿಕ ಸಮಸ್ಯೆಗೆ ಸಿಲುಕುವಂತೆ ಮಾಡಲು ಅವರು ಕಾರಣಗಳನ್ನು ಹುಡುಕುತ್ತಿದ್ದಾರೆ’ ಎಂದು ಗೋವಿಂದನ್ ದೂರಿದರು.
ಜಿಎಸ್ಟಿ ಪರಿಹಾರ ನಿಲ್ಲಿಸಿದ್ದು, ಕೇಂದ್ರ ತೆರಿಗೆಯಲ್ಲಿ ರಾಜ್ಯಗಳ ಪಾಲು ಇಳಿಕೆ ಹಾಗೂ ಸಾಲ ಪಡೆಯಲು ಮಿತಿ ಹೇರಿದ್ದು ಮುಂತಾದ ಕೇಂದ್ರ ಸರ್ಕಾರದ ನಿಲುವುಗಳಿಂದ ರಾಜ್ಯ ಸರ್ಕಾರದ ಹಣಕಾಸಿನ ಸಮಸ್ಯೆ ಎದುರಿಸುತ್ತಿದೆ ಎಂದು ಅವರು ಹೇಳಿದರು.