ನವದೆಹಲಿ:ಲಖೀಂಪುರ ಖೀರಿ ಹಿಂಸಾಚಾರದ ಪ್ರಮುಖ ಆರೋಪಿ ಆಶಿಶ್ ಮಿಶ್ರಾ ಅವರು ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ಸಂಬಂಧ ಪ್ರತಿಕ್ರಿಯೆ ಸಲ್ಲಿಸಲು ಸುಪ್ರೀಂ ಕೋರ್ಟ್ ಸೋಮವಾರ ಉತ್ತರಪ್ರದೇಶ ಸರ್ಕಾರಕ್ಕೆ ಎರಡು ವಾರಗಳ ಕಾಲಾವಕಾಶ ನೀಡಿದೆ.
ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್, ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ನ ಲಖನೌ ಪೀಠವು ಜುಲೈ 26ರಂದು ವಜಾಗೊಳಿಸಿತ್ತು. ಅದನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.
ನವೆಂಬರ್ 7ರಂದು ಅರ್ಜಿಯ ವಿಚಾರಣೆ ನಡೆಸುವುದಾಗಿ ಬಿ.ಆರ್.ಗವಾಯಿ ಮತ್ತು ಬಿ.ವಿ.ನಾಗರತ್ನ ಅವರನ್ನೊಳಗೊಂಡ ದ್ವಿಸದಸ್ಯ ನ್ಯಾಯಪೀಠ ಸೋಮವಾರ ತಿಳಿಸಿದೆ.