ನವದೆಹಲಿ: ಅಂಚೆ ಮತಗಳಿಗೆ ಸಂಬಂಧಿಸಿದ ನಿಯಮಗಳಲ್ಲಿ ಚುನಾವಣಾ ಆಯೋಗವು ಆಂಧ್ರಪ್ರದೇಶಕ್ಕೆ ವಿನಾಯಿತಿ ನೀಡಿರುವುದನ್ನು ಪ್ರಶ್ನಿಸಿ ವೈಎಸ್ಆರ್ ಕಾಂಗ್ರೆಸ್ ಪಕ್ಷವು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.
ಪ್ರಕರಣಗಳ ವಾಸ್ತವಾಂಶ ಮತ್ತು ಸನ್ನಿವೇಶಗಳಿಗೆ ಸಂಬಂಧಿಸಿದಂತೆ, ಜೂನ್ ಒಂದರ ಆಂಧ್ರಪ್ರದೇಶದ ಹೈಕೋರ್ಟ್ನ ಆದೇಶದಲ್ಲಿ ತಾನು ಮಧ್ಯಪ್ರವೇಶ ಮಾಡಲು ಇಚ್ಛಿಸುವುದಿಲ್ಲ ಎಂದು ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಸಂದೀಪ್ ಮೆಹ್ತಾ ಅವರ ರಜಾಕಾಲದ ಪೀಠವು ತಿಳಿಸಿದೆ.
ವಿಷಯಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶದ ಬಗ್ಗೆ ಅರ್ಜಿದಾರರು ಚುನಾವಣಾ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿರುವ ಪೀಠವು, ವೈಎಸ್ಆರ್ಸಿಪಿಯ ಅರ್ಜಿಯನ್ನು ವಜಾಗೊಳಿಸಿದೆ.
ಆಂಧ್ರಪ್ರದೇಶದಲ್ಲಿ ಅಂಚೆ ಮತಗಳ ದೃಢೀಕರಣಕ್ಕೆ ಸಂಬಂಧಿಸಿದಂತೆ ವಿನಾಯಿತಿ ನೀಡಿ ಚುನಾವಣಾ ಆಯೋಗವು ಮೇ 30ರಂದು ಸುತ್ತೋಲೆ ಹೊರಡಿಸಿತ್ತು. ಅದರಿಂದ ರಾಜ್ಯಕ್ಕೆ ತಾರತಮ್ಯ ಮಾಡಿದಂತಾಗಿದೆ ಎಂದು ವೈಎಸ್ಆರ್ ಕಾಂಗ್ರೆಸ್ ಪಕ್ಷವು ವಾದಿಸಿತ್ತು.