ನವದೆಹಲಿ: ದೆಹಲಿಯ ಸೇವಾ ವಿಷಯಗಳ ಆಡಳಿತಾತ್ಮಕ ನಿಯಂತ್ರಣ ಕುರಿತು ಕೇಂದ್ರ ಸರ್ಕಾರವು ಹೊರಡಿಸಿರುವ ಸುಗ್ರೀವಾಜ್ಞೆಗೆ ಮಧ್ಯಂತರ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.
ದೆಹಲಿ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ.ಎಸ್. ನರಸಿಂಹ ಅವರಿದ್ದ ಪೀಠವು, ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ ಜುಲೈ 17ಕ್ಕೆ ವಿಚಾರಣೆಯನ್ನು ಮುಂದೂಡಿತು.
‘ಸುಗ್ರೀವಾಜ್ಞೆಯು ಜನಪ್ರತಿನಿಧಿಗಳ ಹಕ್ಕುಗಳನ್ನು ಮೊಟಕುಗೊಳಿಸುತ್ತದೆ. ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಸರ್ಕಾರ ಮಹಾನಗರ ಪಾಲಿಕೆಗೆ ನೇಮಿಸಿಕೊಂಡಿದ್ದ 437 ಸ್ವತಂತ್ರ ತಜ್ಞರನ್ನು ಲೆಫ್ಟಿನೆಂಟ್ ಗವರ್ನರ್ ವಜಾಗೊಳಿಸಿದ್ದಾರೆ’ ಎಂದು ದೆಹಲಿ ಸರ್ಕಾರದ ಪರ ಹಾಜರಿದ್ದ ವಕೀಲ ಅಭಿಷೇಕ್ ಸಿಂಘ್ವಿ ಪೀಠದ ಗಮನಕ್ಕೆ ತಂದರು.
‘ಲೆಫ್ಟಿನೆಂಟ್ ಗವರ್ನರ್ ಕೈಗೊಂಡಿರುವ ಕ್ರಮ ಪ್ರಶ್ನಿಸಿ ಸರ್ಕಾರ ಸಲ್ಲಿಸುವ ಅರ್ಜಿಯನ್ನೂ ವಿಚಾರಣೆಗೆ ಪರಿಗಣಿಸಲಾಗುವುದು’ ಎಂದು ಪೀಠ ಸ್ಪಷ್ಟಪಡಿಸಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.