ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಮಾಚಲಪ್ರದೇಶದ ಕಾಂಗ್ರೆಸ್‌ನ 6 ಶಾಸಕರ ಅನರ್ಹತೆ ತಡೆಗೆ ಸುಪ್ರೀಂ ಕೋರ್ಟ್ ನಕಾರ

Published 18 ಮಾರ್ಚ್ 2024, 10:42 IST
Last Updated 18 ಮಾರ್ಚ್ 2024, 10:42 IST
ಅಕ್ಷರ ಗಾತ್ರ

ನವದೆಹಲಿ: ರಾಜ್ಯಸಭಾ ಚುನಾವಣೆ ವೇಳೆ ಅಡ್ಡ ಮತದಾನ ಮಾಡಿದ್ದ ಹಿಮಾಚಲ ಪ್ರದೇಶದ 6 ಮಂದಿ ಕಾಂಗ್ರೆಸ್‌ ಶಾಸಕರನ್ನು ಅನರ್ಹಗೊಳಿಸಿ ವಿಧಾನಸಭಾಧ್ಯಕ್ಷರು ನೀಡಿದ್ದ ಆದೇಶಕ್ಕೆ ತಡೆ ನೀಡಲು ಸು‍ಪ್ರೀಂ ಕೋರ್ಟ್ ನಿರಾಕರಿಸಿದೆ.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರನ್ನೊಳಗೊಂಡ ಪೀಠವು, ಈ ಕುರಿತಂತೆ 4 ವಾರಗಳಲ್ಲಿ ಪ್ರತಿಕ್ರಿಯೆ ಕೇಳಿ ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಅವರಿಗೆ ನೋಟಿಸ್ ಜಾರಿ ಮಾಡಿದೆ.

ಪ್ರಕರಣದ ವಿಚಾರಣೆಯು ನ್ಯಾಯಾಲಯದಲ್ಲಿ ಬಾಕಿ ಇರುವಾಗ, ಅನರ್ಹ ಶಾಸಕರು ವಿಧಾನಸಭೆಯ ಕಾರ್ಯ ಕಲಾಪದಲ್ಲಿ ಭಾಗವಹಿಸಲು ಸಾಧ್ಯವಿಲ್ಲ ಎಂದು ಪೀಠ ಹೇಳಿದೆ.

'6 ಕ್ಷೇತ್ರಗಳ ಉಪಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ಹೊರಡಿಸಿರುವ ಅಧಿಸೂಚನೆಗೆ ತಡೆ ನೀಡಬೇಕೆ ಎಂಬ ಬಗ್ಗೆ ಪರಿಶೀಲನೆ ನಡೆಸಬೇಕಿದೆ’ ಎಂದು ಪೀಠ ಹೇಳಿದ್ದು, ಪ್ರಕರಣದ ವಿಚಾರಣೆಯನ್ನು ಮೇ 6ಕ್ಕೆ ಮುಂದೂಡಿದೆ.

ಅನರ್ಹ ಶಾಸಕರಿಂದ ತೆರವಾಗಿರುವ 6 ಕ್ಷೇತ್ರಗಳ ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮೇ 7ರಿಂದ ಆರಂಭವಾಗಲಿದೆ.

ಬಜೆಟ್ ಅನುಮೋದನೆ ವೇಳೆ ಸದನದಲ್ಲಿ ಹಾಜರಿದ್ದು, ಸರ್ಕಾರದ ಪರ ಮತ ಚಲಾಯಿಸುವಂತೆ ನೀಡಿದ್ದ ವಿಪ್ ಉಲ್ಲಂಘಿಸಿದ್ದ ಶಾಸಕರಾದ ಸುಧೀರ್ ಶರ್ಮಾ, ರವಿ ಠಾಕೂರ್, ರಾಜೀಂದರ್ ರಾಣಾ, ಇಂದೇರ್ ದತ್ ಲಖನ್‌ಪಾಲ್, ಚೈತನ್ಯ ಶರ್ಮಾ ಮತ್ತು ದೇವಿಂದರ್ ಕುಮಾರ್ ಭುಟ್ಟೋ ಅವರನ್ನು ಫೆಬ್ರುವರಿ 29ರಂದು ಅನರ್ಹಗೊಳಿಸಿ ವಿಧಾನಸಭಾ ಅಧ್ಯಕ್ಷರು ಆದೇಶಿಸಿದ್ದರು.

6 ಶಾಸಕರ ಅನರ್ಹತೆ ಬಳಿಕ ಸದನದ ಬಲ 68ರಿಂದ 62ಕ್ಕೆ ಇಳಿದಿದ್ದು, ಕಾಂಗ್ರೆಸ್ ಶಾಸಕರ ಬಲ 40ರಿಮದ 34ಕ್ಕೆ ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT