ನವದೆಹಲಿ: ರಾಮಸೇತುವನ್ನು ರಾಷ್ಟ್ರೀಯ ಪಾರಂಪರಿಕ ತಾಣ ಎಂದು ಘೋಷಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು. ಈ ವಿಚಾರಣೆಯನ್ನು ತ್ವರಿತವಾಗಿ ಕೈಗೆತ್ತಿಕೊಳ್ಳಬೇಕು ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಸುಪ್ರೀಂ ಕೋರ್ಟ್ಗೆ ಗುರುವಾರ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿ ವಿಚಾರಣೆ ನಡೆಸಿದಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಎಸ್.ಎ.ಬೊಬಡೆ, ಎಸ್.ಎ.ನಜೀರ್ ಹಾಗೂ ಸಂಜೀವ್ ಖನ್ನಾ ಅವರಿದ್ದ ನ್ಯಾಯಪೀಠವು,‘ಈಗಾಗಲೇ ಹಲವು ಅರ್ಜಿಗಳ ವಿಚಾರಣೆ ಬಾಕಿ ಇದ್ದು, ಮೂರು ತಿಂಗಳ ನಂತರ ಈ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಲಾಗುವುದು’ ಎಂದು ಸ್ವಾಮಿ ಅವರಿಗೆ ತಿಳಿಸಿತು.
ಈ ಅರ್ಜಿಯ ವಿಚಾರಣೆಯನ್ನು ತ್ವರಿತವಾಗಿ ನಡೆಸಬೇಕು ಎಂದು ಸ್ವಾಮಿ ಮನವಿ ಸಲ್ಲಿಸಿದ್ದರು. ‘ಕೇಂದ್ರ ಸರ್ಕಾರ ಈಗಾಗಲೇ ರಾಮಸೇತು ಅಸ್ತಿತ್ವವನ್ನು ಒಪ್ಪಿಕೊಂಡಿದೆ. ರಾಮಸೇತುವನ್ನು ಪಾರಂಪರಿಕ ತಾಣ ಎಂದು ಘೋಷಿಸುವ ಸಂಬಂಧ 2017ರಲ್ಲಿ ಸಭೆ ನಡೆದಿತ್ತು. ಆದರೆ ಈ ಕುರಿತು ಇಲ್ಲಿಯವರೆಗೂ ಯಾವುದೇ ನಿರ್ಧಾರವಾಗಿಲ್ಲ’ ಎಂದು ನ್ಯಾಯಪೀಠದ ಗಮನಕ್ಕೆ ತಂದರು.
ಪ್ರತಿಕ್ರಿಯೆಗೆ 6 ವಾರದ ಕಾಲಾವಕಾಶ ಯುಪಿಎ ಸರ್ಕಾರದ ಅವಧಿಯಲ್ಲಿ ಕೈಗೆತ್ತಿಕೊಂಡಿದ್ದ ವಿವಾದಾತ್ಮಕ ಸೇತುಸಮುದ್ರಂ ಯೋಜನೆ ಸಂದರ್ಭದಲ್ಲಿ, ರಾಮಸೇತುವನ್ನು ರಾಷ್ಟ್ರೀಯ ಪಾರಂಪರಿಕ ತಾಣವನ್ನಾಗಿ ಘೋಷಿಸಲು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಯೋಜನೆಗೆ 2007ರಲ್ಲಿ ಸುಪ್ರೀಂ ಕೋರ್ಟ್ ತಡೆ ನೀಡಿತ್ತು. ರಾಮಸೇತುವಿನ ಕುರಿತು ನಿಲುವು ಸ್ಪಷ್ಟಪಡಿಸಲು 2019 ನವೆಂಬರ್ 13ರಂದು ಆರು ವಾರಗಳ ಕಾಲಾವಕಾಶವನ್ನು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೀಡಿತ್ತು. ಕೇಂದ್ರ ಸರ್ಕಾರ ಪ್ರತಿಕ್ರಿಯೆ ನೀಡದೇ ಇದ್ದಲ್ಲಿ ಮಧ್ಯಂತರ ಅರ್ಜಿ ಸಲ್ಲಿಸುವ ಅವಕಾಶವನ್ನು ಸ್ವಾಮಿ ಅವರಿಗೆ ನೀಡಲಾಗಿತ್ತು.