ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣಾ ಬಾಂಡ್ ಯೋಜನೆ ಅಸಾಂವಿಧಾನಿಕ: ಸುಪ್ರೀಂ ಕೋರ್ಟ್ ತೀರ್ಪು

Published 15 ಫೆಬ್ರುವರಿ 2024, 6:34 IST
Last Updated 15 ಫೆಬ್ರುವರಿ 2024, 6:34 IST
ಅಕ್ಷರ ಗಾತ್ರ

ನವದೆಹಲಿ: ಅನಾಮಧೇಯ ಚುನಾವಣಾ ಬಾಂಡ್ ಯೋಜನೆಯು ಮಾಹಿತಿ ಹಕ್ಕು ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಯೋಜನೆಯು ಸಂವಿಧಾನದ ಪರಿಚ್ಛೇದ 19(1)(ಎ) ಅಡಿಯಲ್ಲಿ ಬರುವ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ. ಹಾಗಾಗಿ, ಅಸಾಂವಿಧಾನಿಕವಾಗಿದೆ ಎಂದು ತೀರ್ಪು ಪ್ರಕಟಿಸುವ ವೇಳೆ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಹೇಳಿದ್ದಾರೆ.

ಖಾಸಗಿತನದ ಮೂಲಭೂತ ಹಕ್ಕು ರಾಜಕೀಯ ಗೋಪ್ಯತೆ ಮತ್ತು ಸಂಬಂಧಿತ ನಾಗರಿಕರ ಹಕ್ಕನ್ನು ಒಳಗೊಂಡಿದೆ ಎಂದು ಪೀಠ ಹೇಳಿದೆ.

ಯೋಜನೆಯನ್ನು ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠವು ಎರಡು ಪ್ರತ್ಯೇಕ, ಸರ್ವಾನುಮತದ ತೀರ್ಪುಗಳನ್ನು ಪ್ರಕಟಿಸಿದೆ.

ಇದೇವೇಳೆ, ಬ್ಯಾಂಕ್‌ಗಳು ಚುನಾವಣಾ ಬಾಂಡ್‌ಗಳ ವಿತರಣೆಯನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

ರಾಜಕೀಯ ಪಕ್ಷಗಳು ನಗದೀಕರಿಸಿದ ಚುನಾವಣಾ ಬಾಂಡ್‌ಗಳ ವಿವರಗಳನ್ನು ಎಸ್‌ಬಿಐ ಒದಗಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಚುನಾವಣಾ ಆಯೋಗಕ್ಕೆ(ಇಸಿಐ) ಎಸ್‌ಬಿಐ ವಿವರಗಳನ್ನು ಸಲ್ಲಿಸಬೇಕು. ಆಯೋಗವು ಈ ವಿವರಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

2018‌ರ ಜನವರಿ 2ರಂದು ಸರ್ಕಾರವು ಈ ಯೋಜನೆಗೆ ಅಧಿಸೂಚನೆ ಹೊರಡಿಸಿತ್ತು.

ಯೋಜನೆಯ ನಿಬಂಧನೆಗಳ ಪ್ರಕಾರ, ಚುನಾವಣಾ ಬಾಂಡ್‌ಗಳನ್ನು ಭಾರತದ ಯಾವುದೇ ನಾಗರಿಕ ಅಥವಾ ದೇಶದಲ್ಲಿ ಸಂಘಟಿತ ಅಥವಾ ಸ್ಥಾಪಿತ ಘಟಕದಿಂದ ಖರೀದಿಸಬಹುದು. ಒಬ್ಬ ವ್ಯಕ್ತಿ ಏಕಾಂಗಿಯಾಗಿ ಅಥವಾ ಇತರ ವ್ಯಕ್ತಿಗಳೊಂದಿಗೆ ಜಂಟಿಯಾಗಿ ಚುನಾವಣಾ ಬಾಂಡ್‌ಗಳನ್ನು ಖರೀದಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT