ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಗೆ ಅಂಗೀಕಾರ ದೊರೆತ ನಂತರದೆಹಲಿಯಲ್ಲಿ ನಡೆದ ಹಿಂಸಾಚಾರ ಪ್ರಕರಣಗಳಲ್ಲಿ ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲಿಸುವುದಕ್ಕೆ ಸಂಬಂಧಿಸಿದಂತೆ ಮಾಹಿತಿ ಆಯೋಗದ ಮುಖ್ಯ ಆಯುಕ್ತರಾಗಿದ್ದ ವಜಾಹತ್ ಹಬಿಬುಲ್ಲಾ ಮತ್ತು ಇತರರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಮಂಗಳವಾರ ಒಪ್ಪಿಕೊಂಡಿದೆ.
ನ್ಯಾಯಾಧೀಶರಾದ ಎಸ್.ಕೆ.ಕೌಲ್ ಮತ್ತು ಕೆ.ಎಂ.ಜೋಸೆಫ್ ಅವರ ನ್ಯಾಯಪೀಠದಲ್ಲಿ ಈ ಅರ್ಜಿಯು ತುರ್ತು ವಿಚಾರಣೆ ಪಟ್ಟಿಯಲ್ಲಿ ಸ್ಥಾನಪಡೆದಿದೆ. ಬುಧವಾರ ಪ್ರಕರಣದ ವಿಚಾರಣೆ ನಡೆಸಲು ನ್ಯಾಯಪೀಠ ಒಪ್ಪಿದೆ.
ಶಾಹೀನ್ ಬಾಗ್ ಮತ್ತು ದೆಹಲಿಯ ಇತರ ಸ್ಥಳಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ಮಹಿಳೆಯರ ಸುರಕ್ಷತೆಗೆ ಕ್ರಮವಹಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಹಬಿಬುಲ್ಲಾ, ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಮತ್ತು ಸಾಮಾಜಿಕ ಕಾರ್ಯಕರ್ತ ಬಹದ್ದೂರ್ ಅಬ್ಬಾಸ್ ನಖ್ವಿ ಮನವಿ ಮಾಡಿದ್ದಾರೆ.