ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣಕ್ಕಾಗಿ ಸ್ವಾಧೀನಪಡಿಸಿಕೊಂಡ ಜಮೀನುಗಳಿಗೆ ನೀಡುವ ಪರಿಹಾರಕ್ಕೆ ಸಂಬಂಧಿಸಿ ಕರ್ನಾಟಕದಲ್ಲಿ ಗರಿಷ್ಠ ಸಂಖ್ಯೆಯ ವ್ಯಾಜ್ಯಗಳಿದ್ದು, ರಾಜ್ಯವು ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ.
ಪರಿಹಾರಕ್ಕೆ ಸಂಬಂಧಿಸಿ ದೇಶದಲ್ಲಿ ಒಟ್ಟು 1,74,387 ವ್ಯಾಜ್ಯಗಳಿವೆ. ಈ ಪೈಕಿ ಕರ್ನಾಟಕದಲ್ಲಿ 23,501 ಪ್ರಕರಣಗಳಿವೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಲೋಕಸಭೆಯಲ್ಲಿ ನೀಡಿರುವ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ಗರಿಷ್ಠ ಸಂಖ್ಯೆಯ 37,327 ವ್ಯಾಜ್ಯಗಳು ಮಹಾರಾಷ್ಟ್ರದಲ್ಲಿದ್ದು, ದೇಶದಲ್ಲಿ ಈ ರಾಜ್ಯ ಮೊದಲ ಸ್ಥಾನದಲ್ಲಿದೆ.ಪಂಜಾಬ್ನಲ್ಲಿ 22,877 ಪ್ರಕರಣಗಳು ಬಾಕಿ ಇದ್ದು, ಮೂರನೇ ಸ್ಥಾನದಲ್ಲಿದೆ.
ಭೂ ಸ್ವಾಧೀನಕ್ಕೆ ಸಂಬಂಧಿಸಿದ ಪರಿಹಾರ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ಹಂತದಲ್ಲಿ ಕೆಲ ಪ್ರಕರಣಗಳಲ್ಲಿ ದೂರುದಾರರು ಹೈಕೋರ್ಟ್ ಮೆಟ್ಟಿಲೇರುತ್ತಾರೆ. ಇನ್ನೂ ಕೆಲ ಪ್ರಕರಣಗಳು ಸುಪ್ರೀಂಕೋರ್ಟ್ಗೂ ಹೋಗುತ್ತವೆ. ಹೀಗಾಗಿ ಪರಿಹಾರ ವಿತರಣೆಯಲ್ಲಿ ಆಗುತ್ತಿರುವ ಈ ವಿಳಂಬವನ್ನು ತಪ್ಪಿಸಬೇಕಾಗಿದೆ ಎಂದು ಅವರು ಹೇಳಿದ್ದಾರೆ.
‘ಈ ವಿಷಯದಲ್ಲಿ ಅಗತ್ಯ ಕಂಡುಬಂದಲ್ಲಿ, ಎಲ್ಲ ಭಾಗಿದಾರರೊಂದಿಗೆ ಚರ್ಚಿಸಿ ಕಾನೂನಿಗೆ ತಿದ್ದುಪಡಿ ತರಲಾಗುವುದು. ಭೂಮಿ ಕಳೆದುಕೊಂಡವರಿಗೆ ತ್ವರಿತವಾಗಿ ಹಾಗೂ ಪಾರದರ್ಶಕ ವಿಧಾನದ ಮೂಲಕ ಪರಿಹಾರ ಸಿಗುವಂತಾಗಬೇಕು ಎಂಬುದೇ ನಮ್ಮ ಉದ್ದೇಶ’ ಎಂದು ತಿಳಿಸಿದ್ದಾರೆ.