ಜೈಲಿನಿಂದ ಹೊರಬಂದ ಎರಡು ದಿನಗಳ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಆರೋಪಿಯಾಗಿರುವ ರಾಘವ್ ಮಾಗುಂಟಾ ಅವರಿಗೆ ಕೇಜ್ರಿವಾಲ್ ಅವರ ವಿರುದ್ಧ ಸುಳ್ಳು ಹೇಳಿಕೆ ನೀಡುವಂತೆ ಬಿಜೆಪಿ ಒತ್ತಡ ಹೇರುತ್ತಿದೆ’ ಎಂದು ಆರೋಪಿಸಿದ್ದಾರೆ.
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮಾರ್ಚ್ 21ರಂದು ಜಾರಿ ನಿರ್ದೇಶನಾಲಯವು ಅರವಿಂದ ಕೇಜ್ರಿವಾಲ್ ಅವರನ್ನು ಬಂಧಿಸಿದೆ.
ಅಬಕಾರಿ ನೀತಿ ಹಗರಣದಲ್ಲಿ ಇ.ಡಿಯಿಂದ ಬಂಧನಕ್ಕೊಳಗಾಗಿದ್ದ ಎಎಪಿ ಸಂಸದ ಸಂಜಯ್ ಸಿಂಗ್ ಅವರಿಗೆ ಸುಪ್ರೀಂ ಕೋರ್ಟ್ ಮಂಗಳವಾರ (ಏಪ್ರಿಲ್ 2) ಜಾಮೀನು ಮಂಜೂರು ಮಾಡಿತ್ತು.
‘ರಾಘವ್ ಮಾಗುಂಟಾ ಅವರ ತಂದೆ, ವೈಎಸ್ಆರ್ ಕಾಂಗ್ರೆಸ್ ಸಂಸದ ಮಾಗುಂಟಾ ಶ್ರೀನಿವಾಸುಲು ರೆಡ್ಡಿ ಅವರ ವಿರುದ್ಧ 2022ರ ಸೆಪ್ಟೆಂಬರ್ 16ರಂದು ಕ್ರಮ ಕೈಗೊಳ್ಳಲಾಗಿತ್ತು. ಈ ವೇಳೆ ಅರವಿಂದ ಕೇಜ್ರಿವಾಲ್ ಅವರ ವಿರುದ್ಧ ಸುಳ್ಳು ಹೇಳಿಕೆ ನೀಡುವಂತೆ ಅವರನ್ನು ಒತ್ತಾಯಿಸಲಾಯಿತು. ಅವರು ನಿರಾಕರಿಸಿದಾಗ, ಅವರ ಮಗ ರಾಘವ್ ರೆಡ್ಡಿ ಅವರನ್ನು ಬಂಧಿಸಲಾಯಿತು. ನಿರಂತರ ವಿಚಾರಣೆಯ ಬಳಿಕ ರೆಡ್ಡಿ ಅವರು ಕೇಜ್ರಿವಾಲ್ ವಿರುದ್ಧ ಹೇಳಿಕೆಯನ್ನು ಬದಲಾಯಿಸಿದರು’ ಎಂದು ಸಿಂಗ್ ತಿಳಿಸಿದ್ದಾರೆ.