ನವದೆಹಲಿ: ಓರ್ವ ಪೊಲೀಸ್ ಹೆಡ್ಕಾನ್ಸ್ಟೆಬಲ್ ಸೇರಿ ನಾಲ್ವರನ್ನು ಬಲಿ ಪಡೆದಈಶಾನ್ಯ ದೆಹಲಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ತಡರಾತ್ರಿ ಹಿರಿಯ ಅಧಿಕಾರಿಗಳ ಸಭೆ ನಡೆಸಿ, ಪರಿಸ್ಥಿತಿ ಅವಲೋಕಿಸಿದರು.
‘ನಮಸ್ತೆ ಟ್ರಂಪ್’ ಕಾರ್ಯಕ್ರಮ ಮುಗಿಸಿಕೊಂಡು ದೆಹಲಿಗೆ ಹಿಂದಿರುಗಿದ ನಂತರ ಅಮಿತ್ ಶಾ ಸಭೆ ನಡೆಸಿ ಕಾನೂನು ಸುವ್ಯವಸ್ಥೆಯ ಸ್ಥಿತಿಗತಿ ವಿಚಾರಿಸಿದರು. ‘ಪರಿಸ್ಥಿತಿ ಶೀಘ್ರ ಸಾಮಾನ್ಯ ಸ್ಥಿತಿಗೆ ಬರಬೇಕು. ಅದಕ್ಕೆ ತಕ್ಕಂತೆ ಏರ್ಪಾಡು ಮಾಡಿ’ ಎಂದು ಶಾ ತಾಕೀತು ಮಾಡಿದರು.
ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ, ಗುಪ್ತಚರ ಇಲಾಖೆ ಮುಖ್ಯಸ್ಥ ಅರವಿಂದ್ ಕುಮಾರ್, ದೆಹಲಿ ಪೊಲೀಸ್ ಆಯುಕ್ತ ಅಮೂಲ್ಯಾ ಪಟ್ನಾಯಿಕ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಪೌರತ್ವ ತಿದ್ದುಪಡಿ ಕಾಯ್ದೆಯ ಪರ–ವಿರೋಧ ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಓರ್ವ ಪೊಲೀಸ್ ಹೆಡ್ಕಾನ್ಸ್ಟೆಬಲ್ ಸೇರಿ ನಾಲ್ವರು ಮೃತಪಟ್ಟು, ಸುಮಾರು 50 ಮಂದಿ ಗಾಯಗೊಂಡಿದ್ದರು. ದೆಹಲಿ ಪೊಲೀಸ್ ಮತ್ತು ಅರೆಸೇನಾ ಪಡೆಯ ಸಿಬ್ಬಂದಿಯೂ ಹಿಂಸಾಚಾರದಲ್ಲಿ ಗಾಯಗೊಂಡಿದ್ದರು.
ಸಿಟ್ಟಿಗೆದ್ದ ಪ್ರತಿಭಟನಾಕಾರರು ಕಲ್ಲುತೂರಾಟ ನಡೆಸುವುದರ ಜೊತೆಗೆಮನೆ, ಅಂಗಡಿ, ವಾಹನಗಳಿಗೆ ಮತ್ತು ಪೆಟ್ರೋಲ್ ಬಂಕ್ ಒಂದಕ್ಕೆ ಬೆಂಕಿ ಹಚ್ಚಿದ್ದರು.