ನವದೆಹಲಿ: ದೇಶದ್ರೋಹ ಮತ್ತು ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿದ ಆರೋಪಗಳಿಗೆ ಗುರಿಯಾಗಿದ್ದ ಜೆಎನ್ಯು ಮಾಜಿ ವಿದ್ಯಾರ್ಥಿ ಶಾರ್ಜೀಲ್ ಇಮಾಮ್ಗೆ ದೆಹಲಿ ಹೈಕೋರ್ಟ್ ಬುಧವಾರ ಜಾಮೀನು ನೀಡಿದೆ.
ಈ ಕುರಿತು ಇಮಾಮ್ ಪರ ವಕೀಲ ಮತ್ತು ದೆಹಲಿ ಪೊಲೀಸರ ವಾದವನ್ನು ಆಲಿಸಿದ ನ್ಯಾಯಮೂರ್ತಿಗಳಾದ ಸುರೇಶ್ ಕುಮಾರ್ ಕೈತ್ ಮತ್ತು ಮನೋಜ್ ಜೈನ್ ಅವರಿದ್ದ ಪೀಠವು, ಜಾಮೀನು ಅರ್ಜಿಯನ್ನು ಪುರಸ್ಕರಿಸಿತು.
2020ರಲ್ಲಿ ಸಂಭವಿಸಿದ ಕೋಮುಗಲಭೆಗಳ ಹಿಂದೆ ಅತಿದೊಡ್ಡ ಪಿತೂರಿ ನಡೆದಿದೆ ಎಂಬ ಆರೋಪ ಸೇರಿದಂತೆ ಹಲವು ಪ್ರಕರಣಗಳಲ್ಲಿ ಇಮಾಮ್ ಆರೋಪಿಯಾಗಿದ್ದು ನ್ಯಾಯಾಂಗ ಬಂಧನದಲ್ಲಿದ್ದಾರೆ.
2019ರ ಡಿಸೆಂಬರ್ 13 ಮತ್ತು 16ರಂದು ಕ್ರಮವಾಗಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ಮತ್ತು ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಭಾಷಣದ ಮೂಲಕ ಗಲಭೆಗೆ ಪ್ರಚೋದನೆ ನೀಡಿದ್ದಾರೆ ಎಂದು ಪ್ರಾಸಿಕ್ಯೂಷನ್ ಆರೋಪಿಸಿತ್ತು. ಈ ಸಂಬಂಧ ದೆಹಲಿ ಪೊಲೀಸರ ವಿಶೇಷ ಘಟಕವು ಇಮಾಮ್ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿಕೊಂಡಿತ್ತು.