ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭ್ರಷ್ಟಾಚಾರ ಪ್ರಕರಣ: ಜೈಲಿನಲ್ಲೇ ಚಂದ್ರಬಾಬು ನಾಯ್ಡು ವಿಚಾರಣೆ ಆರಂಭಿಸಿದ ಸಿಐಡಿ

Published 23 ಸೆಪ್ಟೆಂಬರ್ 2023, 5:59 IST
Last Updated 23 ಸೆಪ್ಟೆಂಬರ್ 2023, 5:59 IST
ಅಕ್ಷರ ಗಾತ್ರ

ವಿಜಯವಾಡ: ಆಂಧ್ರಪ್ರದೇಶದ ಕೌಶಲ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎನ್‌.ಚಂದ್ರಬಾಬು ನಾಯ್ಡು ಅವರ ವಿಚಾರಣೆಯನ್ನು ಅಪರಾಧ ತನಿಖಾ ದಳ (ಸಿಐಡಿ) ಶನಿವಾರ ಜೈಲಿನಲ್ಲೇ ಆರಂಭಿಸಿದೆ.

ತಮ್ಮ ವಿರುದ್ಧದ ಪ್ರಕರಣ ರದ್ದುಗೊಳಿಸುವಂತೆ ಕೋರಿ ನಾಯ್ಡು ಸಲ್ಲಿಸಿದ್ದ ಅರ್ಜಿಯನ್ನು ಆಂಧ್ರಪ್ರದೇಶ ಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. ಇತ್ತ ಇದೇ ಪ್ರಕರಣ ಸಂಬಂಧ ಭ್ರಷ್ಟಾಚಾರ ನಿಗ್ರಹ ದಳದ ವಿಶೇಷ ನ್ಯಾಯಾಲಯವು, ನಾಯ್ಡು ಅವರನ್ನು ಎರಡು ದಿನ ಸಿಐಡಿ ವಶಕ್ಕೆ ಒಪ್ಪಿಸಿ ಆದೇಶಿಸಿದೆ.

ನಾಯ್ಡು ಪರ ವಕೀಲ ಡಿ.ಶ್ರೀನಿವಾಸ್‌ ಅವರ ಉಪಸ್ಥಿತಿಯಲ್ಲಿ ಬೆಳಿಗ್ಗೆ 9.30ರಿಂದ ಸಂಜೆ 5ರ ವರೆಗೆ ವಿಚಾರಣೆಗೆ ಅವಕಾಶ ಕಲ್ಪಿಸಲಾಗಿದೆ. ಅಷ್ಟಲ್ಲದೆ ವಿಚಾರಣೆ ಸಂದರ್ಭದ ವಿಡಿಯೊ ಮತ್ತು ಫೋಟೊಗಳನ್ನು ಬಹಿರಂಗಪಡಿಸದಂತೆಯೂ ನಿರ್ದೇಶನ ನೀಡಿದೆ.

ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥರೂ ಆಗಿರುವ ನಾಯ್ಡು ಅವರು ಸದ್ಯ ರಾಜಮಹೇಂದ್ರವರಂ ಕೇಂದ್ರೀಯ ಕಾರಾಗೃಹದಲ್ಲಿದ್ದಾರೆ. 12 ಅಧಿಕಾರಿಗಳನ್ನೊಳಗೊಂಡ ಸಿಐಡಿ ತಂಡ ಜೈಲಿನಲ್ಲೇ ಬೆಳಿಗ್ಗೆ 9.30ಕ್ಕೆ ವಿಚಾರಣೆ ಆರಂಭಿಸಿದೆ.

ವಿಚಾರಣೆಗೂ ಮುನ್ನ ನಾಯ್ಡು ಅವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ.

ಕೌಶಲ ಅಭಿವೃದ್ಧಿ ನಿಗಮದ ಹಣ ದುರ್ಬಳಕೆಯಿಂದಾಗಿ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ₹300 ಕೋಟಿಗೂ ಹೆಚ್ಚು ನಷ್ಟವಾಗಿದೆ ಎನ್ನಲಾಗಿದ್ದು, ಈ ಪ್ರಕರಣ ಸಂಬಂಧ ಸೆಪ್ಟೆಂಬರ್‌ 9ರಂದು ನಾಯ್ಡು ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದರು.

ಕಾರಾಗೃಹದ ಸುತ್ತಲೂ ಬಿಗಿ ಭದ್ರತೆ ವಹಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT