ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಹಿರಿಯ ವಕೀಲರಾದ ಕಪಿಲ್ ಸಿಬಲ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, 'ಕೆಲವು ಯುದ್ಧಗಳಲ್ಲಿ ಸೋಲುವುದಕ್ಕಾಗಿಯೇ ಹೋರಾಡಬೇಕಾಗುತ್ತದೆ' ಎಂದಿದ್ದಾರೆ.
ರಾಜ್ಯಸಭಾ ಸದಸ್ಯರೂ ಆಗಿರುವ ಸಿಬಲ್, ಎಕ್ಸ್ (ಟ್ವಿಟರ್) ಖಾತೆಯಲ್ಲಿ ಅಸಮಾಧಾನ ಹೊರಹಾಕಿದ್ದಾರೆ. 'ಕೆಲವು ಯುದ್ಧಗಳಲ್ಲಿ ಸೋಲುವುದಕ್ಕಾಗಿಯೇ ಹೋರಾಡಬೇಕಾಗುತ್ತದೆ. ಮುಂದಿನ ತಲೆಮಾರುಗಳು ತಿಳಿದುಕೊಳ್ಳುವುದಕ್ಕಾಗಿ ಅಹಿತಕರ ಸಂಗತಿಗಳನ್ನು ಇತಿಹಾಸದಲ್ಲಿ ದಾಖಲಿಸಬೇಕು. ಸರಿ ಮತ್ತು ತಪ್ಪುಗಳೆಂಬ ಸಾಂಸ್ಥಿಕ ಕ್ರಮಗಳ ಕುರಿತು ಮುಂಬರುವ ವರ್ಷಗಳಲ್ಲಿ ಚರ್ಚಿಸಲಾಗುವುದು. ಇತಿಹಾಸ ಮಾತ್ರವೇ ಐತಿಹಾಸಿಕ ನಿರ್ಧಾರಗಳ ನೈತಿಕ ದಿಕ್ಸೂಚಿಯ ಅಂತಿಮ ತೀರ್ಪುಗಾರ' ಎಂದು ಬರೆದುಕೊಂಡಿದ್ದಾರೆ.
Courts
— Kapil Sibal (@KapilSibal) December 11, 2023
Some battles are fought to be lost
For history must record the uncomfortable facts for generations to know
The right and wrong of institutional actions will be debated for years to come
History alone is the final arbiter
of the moral compass of historic decisions
ಜಮ್ಮು ಮತ್ತು ಕಾಶ್ಮೀರಕ್ಕೆ ಶೀಘ್ರವೇ ರಾಜ್ಯ ಸ್ಥಾನಮಾನ
'ಸಂವಿಧಾನದ 370 ನೇ ವಿಧಿಯಡಿ ಇದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಲು ರಾಷ್ಟ್ರಪತಿಯವರು ಸಾಂವಿಧಾನಿಕ ಆದೇಶ ಹೊರಡಿಸುವ ಅಧಿಕಾರ ಹೊಂದಿದ್ದಾರೆ' ಎಂದು ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ್ ನೇತೃತ್ವದ ಪೀಠ ಹೇಳಿದೆ.
'ಜಮ್ಮು ಮತ್ತು ಕಾಶ್ಮೀರದ ರಾಜ್ಯ ಸ್ಥಾನಮಾನವನ್ನು ಶೀಘ್ರವೇ ಮರುಸ್ಥಾಪಿಸುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಲಾಗುವುದು. ಹಾಗೆಯೇ, ಅಲ್ಲಿನ ವಿಧಾನಸಭೆಗೆ 2024ರ ಸೆಪ್ಟೆಂಬರ್ 30ರ ಒಳಗೆ ಚುನಾವಣೆ ನಡೆಸಲು ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಲಾಗುವುದು' ಎಂದು ತೀರ್ಪು ಪ್ರಕಟಿಸುವ ವೇಳೆ ಸಿಜೆಐ ಹೇಳಿದ್ದಾರೆ.
ಸಂವಿಧಾನದ 370ನೇ ವಿಧಿ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ಕಲ್ಪಿಸಿದ್ದ ವಿಶೇಷ ಸ್ಥಾನಮಾನವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು, 2019ರ ಆಗಸ್ಟ್ 5ರಂದು ರದ್ದುಪಡಿಸಿದೆ. ಹಾಗೆಯೇ, ರಾಜ್ಯವನ್ನು 'ಜಮ್ಮು ಮತ್ತು ಕಾಶ್ಮೀರ' ಹಾಗೂ 'ಲಡಾಖ್' ಎಂದು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.