ಲಖನೌ: ಸಮಾಜವಾದಿ ಪಕ್ಷದ ಶಾಸಕ ಮನೋಜ್ ಪಾಂಡೆ ಅವರು ಮುಖ್ಯ ಸಚೇತಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಜತೆಗೆ, ಇಂದು ನಡೆಯುತ್ತಿರುವ ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸುವ ಸಾಧ್ಯತೆ ಇದೆ ಎಂದು ಸುದ್ದಿಸಂಸ್ಥೆ ‘ಎಎನ್ಐ’ ವರದಿ ಮಾಡಿದೆ.
ಉತ್ತರ ಪ್ರದೇಶದಲ್ಲಿ 10 ರಾಜ್ಯಸಭಾ ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ಇದರ ಬೆನ್ನಲ್ಲೇ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಆಪ್ತರಾಗಿದ್ದ ಮನೋಜ್ ಪಾಂಡೆ ಅವರು ಪಕ್ಷಕ್ಕೆ ರಾಜೀನಾಮೆ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ.
‘ನೀವು ನನ್ನನ್ನು ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಎಸ್ಪಿಯ ಶಾಸಕಾಂಗ ಪಕ್ಷದ ಮುಖ್ಯ ಸಚೇತಕರನ್ನಾಗಿ ನೇಮಿಸಿದ್ದೀರಿ ಎಂದು ನಾನು ತಿಳಿಸಲು ಬಯಸುತ್ತೇನೆ. ಇದೀಗ ನಾನು ಮುಖ್ಯ ಸಚೇತಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ, ದಯವಿಟ್ಟು ಸ್ವೀಕರಿಸಿ’ ಎಂದು ಮನೋಜ್ ಪಾಂಡೆ ಅವರು ಅಖಿಲೇಶ್ ಯಾದವ್ಗೆ ಬರೆದ ರಾಜೀನಾಮೆ ಪತ್ರ ಉಲ್ಲೇಖಿಸಿದ್ದಾರೆ.
ಸೋಮವಾರ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಕರೆದಿದ್ದ ಸಭೆಗೆ ಮನೋಜ್ ಪಾಂಡೆ ಸೇರಿದಂತೆ ಎಂಟು ಶಾಸಕರು ಹಾಜರಾಗಲಿಲ್ಲ.