ಚೆನ್ನೈ: ಉದಯನಿಧಿ ಸ್ಟಾಲಿನ್ ಅವರನ್ನು ತಮಿಳುನಾಡಿನ ಉಪಮುಖ್ಯಮಂತ್ರಿಯನ್ನಾಗಿ ಮಾಡಲಾಗುತ್ತದೆ ಎಂಬ ವದಂತಿಯನ್ನು ಡಿ.ಎಂ.ಕೆ ಅಧ್ಯಕ್ಷ, ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಳ್ಳಿಹಾಕಿದ್ದಾರೆ.
ಪಕ್ಷದ ಕಾರ್ಯಕರ್ತರಿಗೆ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ ಅವರು, ‘ಯುವ ಘಟಕದ ಅಧ್ಯಕ್ಷ ಉದಯನಿಧಿ ನೇತೃತ್ವದಲ್ಲಿ ಜನವರಿ 21ರಂದು ನಡೆಯಲಿರುವ ಡಿಎಂಕೆ ಯುವ ಸಮಾವೇಶವನ್ನು ವಿರೋಧಿಸುತ್ತಿರುವವರು ಇಂತಹ ಅಪಪ್ರಚಾರ ಮಾಡುತ್ತಿದ್ದಾರೆ’ ಎಂದರು.
‘ರಾಜ್ಯದ ಯುವ ಜನತೆ ಸಮಾವೇಶಕ್ಕೆ ಸಿದ್ಧರಾಗುತ್ತಿರುವ ಸಂದರ್ಭದಲ್ಲಿ ಕೆಲವರು ನನ್ನ ಆರೋಗ್ಯದ ಕುರಿತು ಸುಳ್ಳು ಸುದ್ದಿಯನ್ನು ಹರಡುವುದರಲ್ಲಿ ನಿರತರಾಗಿದ್ದಾರೆ. ನಾನು ಆರೋಗ್ಯವಾಗಿದ್ದೇನೆ. ನಾನು ಕೆಲಸ ಮಾಡುತ್ತಿದ್ದೇನೆ’ ಎಂದು ತಿಳಿಸಿದ್ದಾರೆ.
‘ಈಗಾಗಲೇ ಉದಯನಿಧಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಎಲ್ಲ ಸಚಿವರು ಸಹಕಾರ ನೀಡುತ್ತಿದ್ದಾರೆ. ಈ ವಿಚಾರವನ್ನು ಕೊನೆಗೊಳಿಸುತ್ತಿದ್ದೇವೆ’ ಎಂದರು.