ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾನು ಕೇಂದ್ರ ಸಚಿವನಾಗುವ ಸುದ್ದಿ ಎಲ್ಲಿಂದ ಹುಟ್ಟಿತು ಎಂಬುದೇ ಯಕ್ಷಪ್ರಶ್ನೆ: HDK

Published 18 ಜನವರಿ 2024, 9:34 IST
Last Updated 18 ಜನವರಿ 2024, 9:34 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಸಚಿವರಾಗುವ ವದಂತಿಗಳನ್ನು ಸಾರಾಸಗಟಾಗಿ ಅಲ್ಲಗಳೆದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ‘ಯಾವ ಮೂಲದಿಂದ, ಯಾವ ಕಾರಣಕ್ಕಾಗಿ ಈ ಸುದ್ದಿ ಹುಟ್ಟುಕೊಂಡಿತು ಎಂಬುದು ಈಗಲೂ ನನಗೆ ಯಕ್ಷಪ್ರಶ್ನೆಯಾಗಿದೆ’ ಎಂದಿದ್ದಾರೆ.

ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿದ ಅವರು, ‘ಚುನಾವಣೆ ಹತ್ತಿರದಲ್ಲಿ ಇದೆ. ಎರಡು ತಿಂಗಳಷ್ಟೇ ಸಮಯ ಉಳಿದಿದೆ. ಈಗ ನಾನು ಮಂತ್ರಿಯಾಗಿ ಮಾಡುವುದು ಏನಿದೆ? ಇಷ್ಟು ಅಲ್ಪ ಅವಧಿಯಲ್ಲಿ ರಾಜ್ಯಕ್ಕೆ, ರಾಷ್ಟ್ರಕ್ಕೆ ನಾನು ಏನು ಕೆಲಸ ಮಾಡಲು ಸಾಧ್ಯ? ಚುನಾವಣೆ ನೀತಿ ಸಂಹಿತೆ ಜಾರಿಗೆ ಬಂದ ಮೇಲೆ ಏನನ್ನೂ ಮಾಡಲು ಸಾಧ್ಯವಿಲ್ಲ. ಅದರಿಂದ ಉಪಯೋಗವೂ ಇಲ್ಲ’ ಎಂದು ಹೇಳಿದ್ದಾರೆ.

‘ಕೇಂದ್ರ ಸಚಿವನಾಗಬೇಕು ಎನ್ನುವ ಆಸಕ್ತಿಯೂ ನನ್ನಲ್ಲಿ ಇಲ್ಲ. ನನಗಿರುವ ಉದ್ದೇಶ ಒಂದೇ, ಮುಂದಿನ ಲೋಕಸಭೆ ಚುನಾವಣೆಯಲ್ಲಿ 28ಕ್ಕೆ 28 ಲೋಕಸಭೆ ಕ್ಷೇತ್ರಗಳನ್ನು ಗೆಲ್ಲಬೇಕು. ಅದಷ್ಟೇ ನನ್ನ ಮುಂದಿರುವ ಎಕೈಕ ಅಜೆಂಡಾ’ ಎಂದು ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ಪ್ರಾಣಪ್ರತಿಷ್ಠೆ ನಂತರ ಕ್ಷೇತ್ರ ಹಂಚಿಕೆ ನಿರ್ಧಾರ

ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರಾಣಪ್ರತಿಷ್ಠೆ ಕಾರ್ಯಕ್ರಮ ಮುಗಿದ ಮೇಲೆ ಕ್ಷೇತ್ರ ಹಂಚಿಕೆ, ಮತ್ತಿತರೆ ಪ್ರಕ್ರಿಯೆಗಳನ್ನು ಪೂರ್ಣ ಮಾಡಲು ನಿರ್ಧರಿಸಲಾಗಿದೆ. ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷಗಳ ರಾಜ್ಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಒಪ್ಪಿಗೆ ಸೂಚಿಸಿದ್ದಾರೆ’ ಎಂದು ಕುಮಾರಸ್ವಾಮಿ ಅವರು ತಿಳಿಸಿದರು.

‘ಕ್ಷೇತ್ರಗಳ ಹಂಚಿಕೆಯ ಬಗ್ಗೆ ಎರಡೂ ಪಕ್ಷಗಳಲ್ಲಿ ಅತ್ಯಂತ ಸೌಹಾರ್ದ ಮನೋಭಾವನೆ ಇದೆ. ಯಾವುದೇ ಗೊಂದಲ, ಪ್ರಶ್ನೆಗಳು ಇಲ್ಲ ಎಂಬುದನ್ನು ಸ್ಪಷ್ಟವಾಗಿ ಹೇಳಬಯಸುತ್ತೇನೆ. ರಾಜ್ಯಕ್ಕೆ ಒಳ್ಳೆಯದಾಗಬೇಕು ಎನ್ನುವು ಏಕೈಕ ಉದ್ದೇಶದಿಂದ ಜೆಡಿಎಸ್ ಪಕ್ಷವು ಎನ್‌ಡಿಎ ಮೈತ್ರಿಕೂಟ ಸೇರಿದೆ. ಈಗಾಗಲೇ ರಾಜ್ಯದ ಸ್ಥಿತಿಗತಿ, ಕ್ಷೇತ್ರಾವಾರು ಪರಿಸ್ಥಿತಿಗಳ ಬಗ್ಗೆ ಬಿಜೆಪಿ ರಾಷ್ಟ್ರೀಯ ಅದ್ಯಕ್ಷರ ಬಳಿ ಸಮೀಕ್ಷಾ ವರದಿಗಳಿವೆ. ಅದೇ ರೀತಿ ನಾವೂ ಇದೇ ರೀತಿಯ ವರದಿಗಳನ್ನು ಸಿದ್ಧ ಮಾಡಿದ್ದೇವೆ. ಎರಡೂ ಕಡೆಯ ಮಾಹಿತಿಗಳು, ವರದಿಗಳ ಬಗ್ಗೆಯೂ ಸುದೀರ್ಘವಾಗಿ, ಮುಕ್ತವಾಗಿ ಚರ್ಚೆ ಮಾಡಿದ್ದೇವೆ’ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

‘ತಮ್ಮದು ದೊಡ್ಡ ಪಕ್ಷ, ಜೆಡಿಎಸ್ ಚಿಕ್ಕ ಪಕ್ಷ ಎನ್ನುವ ಭಾವನೆ ಅಮಿತ್ ಶಾ ಮತ್ತು ನಡ್ಡಾ ಅವರಲ್ಲಿ ಇಲ್ಲ. ಅತ್ಯಂತ ಪ್ರೀತಿ, ವಿಶ್ವಾಸ, ಸ್ನೇಹಪೂರ್ವಕವಾಗಿ ಅವರು ಮಾತುಕತೆ ನಡೆಸಿದರು. ದೇವೇಗೌಡರ ಮೇಲೆ ಅವರು ಅಪಾರ ಗೌರವ ಇರಿಸಿಕೊಂಡಿದ್ದಾರೆ. ನಮ್ಮ ಹಾಗೂ ನಮ್ಮ ಪಕ್ಷದ ನಡವಳಿಕೆಗಳನ್ನು ಬಿಜೆಪಿ ಕೇಂದ್ರದ ನಾಯಕರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಅವರ ನಂಬಿಕೆ, ವಿಶ್ವಾಸಕ್ಕೆ ಧಕ್ಕೆ ಬಾರದ ರೀತಿಯಲ್ಲಿ ನಾವೂ ನಡೆದುಕೊಳ್ಳುತ್ತೇವೆ. ಪರಸ್ಪರ ವಿಶ್ವಾಸ, ನಂಬಿಕೆಯ ತಳಹದಿಯ ಮೇಲೆ ಈ ಮೈತ್ರಿ ಚಿರಕಾಲ ಮುಂದುವರಿಯುತ್ತದೆ’ ಎಂಬ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ, ಮಾಜಿ ಸಂಸದ ಕುಪೇಂದ್ರ ರೆಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT