ಅಯೋಧ್ಯೆ: ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಯೋಧ್ಯೆಯಾದ್ಯಂತ ಬಹು ಹಂತದ ಬಿಗಿ ಭದ್ರತೆ ಏರ್ಪಡಿಸಲಾಗಿದೆ.
ಧರ್ಮಪೀಠದಿಂದ ರಾಮಪಥವರೆಗೆ ಮತ್ತು ಹನುಮಗಿರಿಯಿಂದ ಅಶರ್ಫೀ ಭವನದವರೆಗಿನ ಎಲ್ಲ ರಸ್ತೆಗಳಲ್ಲಿ ಪೊಲೀಸರು ಗಸ್ತು ತಿರುಗುವುದು ಕಾಣಿಸುತ್ತದೆ. ಉತ್ತರ ಪ್ರದೇಶದ ಭಯೋತ್ಪಾದಕ ನಿಗ್ರಹ ದಳದ (ಎಟಿಎಸ್) ಸಿಬ್ಬಂದಿ ಭಾನುವಾರ ಅಯೋಧ್ಯೆಯಲ್ಲಿ ಪಥಸಂಚಲನ ನಡೆಸಿದರು.
‘ಪ್ರಾಣ ಪ್ರತಿಷ್ಠಾಪನಾ ಸಮಾರಂಭಕ್ಕಾಗಿ ಉತ್ತರ ಪ್ರದೇಶ ಪೊಲೀಸರು ವ್ಯಾಪಕ ಭದ್ರತಾ ವ್ಯವಸ್ಥೆ ಕೈಗೊಂಡಿದ್ದಾರೆ’ ಎಂದು ಕಾನೂನು ಮತ್ತು ಸುವ್ಯವಸ್ಥೆಯ ಡಿಜಿ ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ.
‘ಕಾರ್ಯಕ್ರಮದ ಸ್ಥಳದಲ್ಲಿ ಬಿಗಿ ಭದ್ರತೆ ಖಚಿತಪಡಿಸಿಕೊಳ್ಳಲು, ತಂತ್ರಜ್ಞಾನವನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸಲಾಗಿದೆ. ಅಯೋಧ್ಯೆ ಜಿಲ್ಲೆಯಾದ್ಯಂತ 10 ಸಾವಿರ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ’ ಎಂದು ಹೇಳಿದ್ದಾರೆ.
‘ಇಡೀ ಪಟ್ಟಣದ ಮೇಲೆ ಕಣ್ಗಾವಲು ಇಡಲು ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಆಧರಿತ ಡ್ರೋನ್ಗಳನ್ನೂ ಬಳಸಲಾಗುತ್ತಿದೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.
ಬಹುಭಾಷೆ ಬಲ್ಲ ಪೊಲೀಸರ ಪ್ರತ್ಯೇಕ ಮಫ್ತಿ ತಂಡಗಳು ಕಾರ್ಯಕ್ರಮದ ತಾಣದಲ್ಲಿ ನಿಯೋಜನೆಗೊಂಡಿದೆ. ಸರಯೂ ನದಿಗೆ ಹೊಂದಿಕೊಂಡಿರುವ ಪ್ರದೇಶದಲ್ಲಿ ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.