ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಪರಾಭವಗೊಂಡ ಕಾಂಗ್ರೆಸ್ ಅಭ್ಯರ್ಥಿ ಅಭಿಷೇಕ್ ಮನು ಸಿಂಘ್ವಿ ಅವರ ಸೋಲಿನ ಹೊಣೆಯನ್ನು ಮುಖ್ಯಮಂತ್ರಿ ಸುಖ್ವಿಂದರ್ ಸುಖು ಹೊರಲಿದ್ದಾರೆ ಎಂದು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಹಿಮಾಚಲ ಪ್ರದೇಶ ಕಾಂಗ್ರೆಸ್ ವೀಕ್ಷಕರಾದ ಭೂಪಿಂದರ್ ಹೂಡಾ ಮತ್ತು ಡಿ.ಕೆ. ಶಿವಕುಮಾರ್, ಪಕ್ಷದ ಎಲ್ಲಾ ಶಾಸಕರೊಂದಿಗೆ ಮಾತುಕತೆ ನಡೆಸಿ ಭಿನ್ನಾಭಿಪ್ರಾಯಗಳನ್ನು ಸರಿಪಡಿಸಲಾಗಿದೆ, ಪೂರ್ಣ ಅವಧಿಗೂ ಕಾಂಗ್ರೆಸ್ ಸರ್ಕಾರವೇ ಇರಲಿದೆ ಎಂದರು.
ಶಿಸ್ತು ಕಾಪಾಡುವುದು ಕಾಂಗ್ರೆಸ್ನ ಮೊದಲ ಆದ್ಯತೆ, ಸರ್ಕಾರವು ಸದನದಲ್ಲಿ ಬಹುಮತವನ್ನು ಸಾಬೀತುಪಡಿಸಿದೆ. ಪಕ್ಷದ ಎಲ್ಲಾ ಶಾಸಕರು ಮತ್ತು ಇತರ ನಾಯಕರು ಒಟ್ಟಾಗಿ ಕೆಲಸ ಮಾಡಲು ನಿರ್ಧರಿಸಿದ್ದಾರೆ ಎಂದರು.
ಮುಖ್ಯಮಂತ್ರಿ ಹುದ್ದೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ಸುಖು ಅವರು ಇರುವಾಗ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಕಾಲ್ಪನಿಕ ಪ್ರಶ್ನೆಗಳೇಕೆ?, ಪಕ್ಷದಲ್ಲಿನ ಎಲ್ಲಾ ಆಂತರಿಕ ವಿಷಯಗಳನ್ನು ಬಗೆಹರಿಸಿಕೊಳ್ಳಲು ಸಮನ್ವಯ ಸಮಿತಿ ರಚಿಸಲು ನಿರ್ಧರಿಸಲಾಗಿದೆ. ಈ ವಿಷಯ ಕುರಿತು ಯಾವುದೇ ನಾಯಕರು ಪತ್ರಿಕಾಗೋಷ್ಠಿ ನಡೆಸುವುದಿಲ್ಲ ಎಂದು ಉತ್ತರಿಸಿದರು.