ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶರಣಾಗತಿ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ: ತೀಸ್ತಾಗೆ ಒಂದು ವಾರ ನಿರಾಳ

Published 1 ಜುಲೈ 2023, 18:43 IST
Last Updated 1 ಜುಲೈ 2023, 18:43 IST
ಅಕ್ಷರ ಗಾತ್ರ

ನವದೆಹಲಿ: ನ್ಯಾಯಾಲಯಕ್ಕೆ ಕೂಡಲೇ ಶರಣಾಗುವಂತೆ ಸಾಮಾಜಿಕ ಹೋ‌ರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರಿಗೆ ಗುಜರಾತ್‌ ಹೈಕೋರ್ಟ್‌ ಶನಿವಾರ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್‌ ಒಂದು ವಾರದ ಮಟ್ಟಿಗೆ ತಡೆಯಾಜ್ಞೆ ನೀಡಿದೆ. 

ನ್ಯಾಯಮೂರ್ತಿಗಳಾದ ಬಿ.ಆರ್‌. ಗವಾಯಿ, ಎ.ಎಸ್‌. ಬೋಪಣ್ಣ ಮತ್ತು ದೀಪಂಕರ್‌ ದತ್ತ ಅವರಿದ್ದ ತ್ರಿಸದಸ್ಯ ಪೀಠವು, ಸಂಜೆ ವಿಭಾಗೀಯ ಪೀಠ ನಡೆಸಿದ್ದ ವಿಚಾರಣೆಯನ್ನು ಅವಲೋಕಿಸಿ ಈ ಆದೇಶ ಪ್ರಕಟಿಸಿದೆ. 

ಗುಜರಾತ್‌ ಹೈಕೋರ್ಟ್‌ ಆದೇಶದ ವಿರುದ್ಧ ತೀಸ್ತಾ ಅವರು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಮೇಲ್ಮನವಿಯನ್ನು ಅಭಯ್‌ ಎಸ್‌. ಓಕಾ ಮತ್ತು ಮತ್ತು ಪ್ರಶಾಂತ್‌ ಕುಮಾರ್‌ ಮಿಶ್ರಾ ಅವರು ವಿಸ್ತೃತ ಪೀಠಕ್ಕೆ ವರ್ಗಾಯಿಸಿದ್ದರು. 

2002ರ ಗುಜರಾತ್‌ ಗಲಭೆ ಪ್ರಕರಣದಲ್ಲಿ ಮುಗ್ಧ ಜನರನ್ನು ಸಾಕ್ಷ್ಯಗಳಾಗಿ ತಯಾರು ಮಾಡಿದ ಆರೋಪ ಮೇಲೆ ತೀಸ್ತಾ, ನಿವೃತ್ತ ಪೊಲೀಸ್ ಅಧಿಕಾರಿ ಆರ್‌.ಬಿ. ಶ್ರೀಕುಮಾರ್‌ ಸೇರಿದಂತೆ ಇತರರ ವಿರುದ್ಧ ಗುಜರಾತ್‌ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು. ಈ ಪ್ರಕರಣದಲ್ಲಿ ತೀಸ್ತಾ ಅವರಿಗೆ ಸುಪ್ರೀಂ ಕೋರ್ಟ್‌ ಮಧ್ಯಂತರ ಜಾಮೀನು ನೀಡಿತ್ತು. ಇದರ ಅವಧಿ ಮುಗಿದಿದ್ದರಿಂದ ಕೋರ್ಟ್‌ಗೆ ಶರಣಾಗುವಂತೆ ಹೈಕೋರ್ಟ್‌ ಸೂಚಿಸಿತ್ತು.

ಹಾಗಾಗಿ, ತ್ವರಿತವಾಗಿ ಜಾಮೀನಿನ ವಿಚಾರಣೆ ನಡೆಸುವಂತೆ ತೀಸ್ತಾ ಅವರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಮುಖ್ಯ ನ್ಯಾಯಮೂರ್ತಿ ಅವರ ಸೂಚನೆ ಮೇರೆಗೆ ನ್ಯಾಯಾಲಯದ ಕಲಾಪ ಮುಗಿದ ಬಳಿಕ ಸಂಜೆ 6.30ಕ್ಕೆ ವಿಚಾರಣೆ ನಡೆಸಿದ ವಿಭಾಗೀಯ ಪೀಠವು ಈ ಬಗ್ಗೆ ಭಿನ್ನ ಅಭಿಪ್ರಾಯ ವ್ಯಕ್ತಪಡಿಸಿ ವಿಸ್ತೃತ ಪೀಠಕ್ಕೆ ಜಾಮೀನು ಅರ್ಜಿಯನ್ನು ವರ್ಗಾಯಿಸಿತ್ತು.

‘ತೀಸ್ತಾಗೆ ಶರಣಾಗಲು ಹೈಕೋರ್ಟ್‌ ಸ್ವಲ್ಪ ಕಾಲಾವಕಾಶ ನೀಡಬೇಕಿತ್ತು’ ಎಂದು ನ್ಯಾಯಮೂರ್ತಿ ಓಕಾ ಹೇಳಿದರು.

ಸರ್ಕಾರದ ವಾದವೇನು?: ಗುಜರಾತ್‌ ಸರ್ಕಾರದ ಪರ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್‌ ಮೆಹ್ತಾ, ‘ಸರ್ಕಾರದ ವಿರುದ್ಧ ತೀಸ್ತಾ ಅವರು ಗಂಭೀರ ಆರೋಪ ಮಾಡಿದ್ದಾರೆ. ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪ ಹೊತ್ತಿರುವ ಅವರು ಮಧ್ಯಂತರ ಜಾಮೀನಿಗೂ ಅರ್ಹರಿಲ್ಲ’ ಎಂದು ವಾದಿಸಿದರು.

ಹಿರಿಯ ವಕೀಲ ಚಂದರ್ ಉದಯ್ ಸಿಂಗ್ ಮತ್ತು ವಕೀಲರಾದ ಅರ್ಪಣಾ ಭಟ್‌ ಅವರು, ತೀಸ್ತಾ ಪರ ಹಾಜರಾಗಿದ್ದರು.

ಗುಜರಾತ್‌ ಮುಖ್ಯಮಂತ್ರಿಯಾಗಿದ್ದ ವೇಳೆ ನರೇಂದ್ರ ಮೋದಿ ಅವರ ವರ್ಚಸ್ಸಿಗೆ ಕಳಂಕ ತರುವ ಉದ್ದೇಶದಿಂದ ಸುಳ್ಳು ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪದ ಮೇಲೆ ತೀಸ್ತಾ ವಿರುದ್ಧ‌‌ 2022ರ ಜೂನ್‌ 24ರಂದು ಎಫ್‌ಐಆರ್‌ ದಾಖಲಿಸಿ ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಅವರಿಗೆ ಸೆಪ್ಟೆಂಬರ್‌ 2ರಂದು ಸುಪ್ರೀಂ ಕೋರ್ಟ್‌ ಮಧ್ಯಂತರ ಜಾಮೀನು ನೀಡಿತ್ತು.  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT