ನವದೆಹಲಿ: ಹೆಚ್ಚುವರಿ ನೀರು ಬಿಡಲು ಹರಿಯಾಣ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ದೆಹಲಿ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ನಡೆಸಲಿದೆ.
ಸುಪ್ರೀಂ ಕೋರ್ಟ್ ವೇಳಾಪಟ್ಟಿಯ ಪ್ರಕಾರ ನ್ಯಾಯಮೂರ್ತಿಗಳಾದ ಪಿ.ಕೆ.ಮಿಶ್ರಾ ಹಾಗೂ ಕೆ.ವಿ.ವಿಶ್ವನಾಥನ್ ಅವರನ್ನು ಒಳಗೊಂಡ ರಜಾ ಕಾಲದ ದ್ವಿಸದಸ್ಯ ಪೀಠವು ವಿಚಾರಣೆ ನಡೆಸಲಿದೆ.
ದೆಹಲಿ ಸರ್ಕಾರದ ಜಲ ಸಚಿವೆ ಆತಿಶಿ ಅವರು ಅರ್ಜಿ ಸಲ್ಲಿಸಿದ್ದು, ಕೇಂದ್ರ ಸರ್ಕಾರ, ಹರಿಯಾಣ ಸರ್ಕಾರ ಹಾಗೂ ಹಿಮಾಚಲ ಪ್ರದೇಶ ಸರ್ಕಾರವನ್ನು ಪ್ರತಿವಾದಿಗಳನ್ನಾಗಿಸಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿನ ನೀರಿನ ಅಭಾವವನ್ನು ತಗ್ಗಿಸುವ ನಿಟ್ಟಿನಲ್ಲಿ ಹೆಚ್ಚುವರಿ ನೀರಿನ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದಾರೆ.
ಬಿಸಿಗಾಳಿಯ ಪರಿಣಾಮ ದೆಹಲಿಯಲ್ಲಿ ನೀರಿನ ಬೇಡಿಕೆ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿದೆ. ಹೀಗಾಗಿ ಒಂದು ತಿಂಗಳವರೆಗೆ ಹೆಚ್ಚುವರಿ ನೀರು ಬಿಡುಗಡೆ ಮಾಡುವಂತೆ ಹರಿಯಾಣ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ದೆಹಲಿ ಸರ್ಕಾರ ಕೋರಿದೆ.