ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹೆಚ್ಚುವರಿ ನೀರಿಗೆ ದೆಹಲಿ ಬೇಡಿಕೆ: ಸುಪ್ರೀಂ ಕೋರ್ಟ್‌ನಲ್ಲಿ ಸೋಮವಾರ ವಿಚಾರಣೆ

Published 1 ಜೂನ್ 2024, 9:59 IST
Last Updated 1 ಜೂನ್ 2024, 9:59 IST
ಅಕ್ಷರ ಗಾತ್ರ

ನವದೆಹಲಿ: ಹೆಚ್ಚುವರಿ ನೀರು ಬಿಡಲು ಹರಿಯಾಣ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ದೆಹಲಿ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ನಡೆಸಲಿದೆ.

ಸುಪ್ರೀಂ ಕೋರ್ಟ್‌ ವೇಳಾಪಟ್ಟಿಯ ಪ್ರಕಾರ ನ್ಯಾಯಮೂರ್ತಿಗಳಾದ ಪಿ.ಕೆ.ಮಿಶ್ರಾ ಹಾಗೂ ಕೆ.ವಿ.ವಿಶ್ವನಾಥನ್‌ ಅವರನ್ನು ಒಳಗೊಂಡ ರಜಾ ಕಾಲದ ದ್ವಿಸದಸ್ಯ ಪೀಠವು ವಿಚಾರಣೆ ನಡೆಸಲಿದೆ.

ದೆಹಲಿ ಸರ್ಕಾರದ ಜಲ ಸಚಿವೆ ಆತಿಶಿ ಅವರು ಅರ್ಜಿ ಸಲ್ಲಿಸಿದ್ದು, ಕೇಂದ್ರ ಸರ್ಕಾರ, ಹರಿಯಾಣ ಸರ್ಕಾರ ಹಾಗೂ ಹಿಮಾಚಲ ಪ್ರದೇಶ ಸರ್ಕಾರವನ್ನು ಪ್ರತಿವಾದಿಗಳನ್ನಾಗಿಸಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿನ ನೀರಿನ ಅಭಾವವನ್ನು ತಗ್ಗಿಸುವ ನಿಟ್ಟಿನಲ್ಲಿ ಹೆಚ್ಚುವರಿ ನೀರಿನ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದಾರೆ.

ಬಿಸಿಗಾಳಿಯ ಪರಿಣಾಮ ದೆಹಲಿಯಲ್ಲಿ ನೀರಿನ ಬೇಡಿಕೆ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿದೆ. ಹೀಗಾಗಿ ಒಂದು ತಿಂಗಳವರೆಗೆ ಹೆಚ್ಚುವರಿ ನೀರು ಬಿಡುಗಡೆ ಮಾಡುವಂತೆ ಹರಿಯಾಣ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ದೆಹಲಿ ಸರ್ಕಾರ ಕೋರಿದೆ.

ಕೇಂದ್ರಕ್ಕೆ ಪತ್ರ ಬರೆದ ಆತಿಶಿ: ದೆಹಲಿಯ ನೀರಿನ ಬಿಕ್ಕಟ್ಟನ್ನು ಪರಿಹರಿಸಲು ಉತ್ತರ ಪ್ರದೇಶ ಅಥವಾ ಹರಿಯಾಣದಿಂದ ನೀರನ್ನು ಬಿಡುಗಡೆ ಮಾಡಿಸುವಂತೆ ಕೋರಿ ದೆಹಲಿ ಜಲ ಸಚಿವ ಆತಿಶಿ ಅವರು ಕೇಂದ್ರದ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್‌ ಶೆಖಾವತ್‌ ಅವರಿಗೆ ಪತ್ರ ಬರೆದಿದ್ದಾರೆ.

ಹರಿಯಾಣವು ಯಮುನಾ ನದಿಗೆ ಅಗತ್ಯ ಪ್ರಮಾಣದಲ್ಲಿ ನೀರು ಹರಿಸುತ್ತಿಲ್ಲ. ಇದರಿಂದಾಗಿ ಕೆಲ ದಿನಗಳಿಂದ ವಜೀರಾಬಾದ್‌ ಬ್ಯಾರೇಜ್‌ನಲ್ಲಿ ನೀರಿನ ಮಟ್ಟ ತೀವ್ರವಾಗಿ ಕುಸಿತವಾಗಿದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

‘ದೇಶದ ರಾಜಧಾನಿ ತೀವ್ರ ನೀರಿನ ಸಮಸ್ಯೆ ಎದುರಿಸುತ್ತಿದ್ದು, ದೆಹಲಿಯ ಪಾಲಿನ ನೀರನ್ನು ಹರಿಯಾಣ ಬಿಡುಗಡೆ ಮಾಡುತ್ತಿಲ್ಲ’ ಎಂದು ಆರೋಪಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT