ಲಖನೌ: ಸಮಾಜವಾದಿ ಪಕ್ಷದ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಅವರು ಮಂಗಳವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಜತೆಗೆ ವಿಧಾನ ಪರಿಷತ್ತಿನ ಸದಸ್ಯತ್ವವನ್ನೂ ತೊರೆದಿದ್ದಾರೆ.
ಇತ್ತೀಚೆಗಷ್ಟೇ ಸ್ವಾಮಿ ಪ್ರಸಾದ್ ಮೌರ್ಯ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು.
ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರಿಗೆ ಪತ್ರ ಬರೆದಿರುವ ಸ್ವಾಮಿ ಪ್ರಸಾದ್, 'ನನಗೆ ನಿಮ್ಮೊಂದಿಗೆ ಕೆಲಸ ಮಾಡಲು ಅವಕಾಶ ದೊರಕಿತು. ಆದರೆ ಫೆಬ್ರುವರಿ 12ರಂದು ನಡೆದ ಮಾತುಕತೆ ಮತ್ತು ಫೆ.13ರಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ ನಂತರ ನನ್ನೊಂದಿಗೆ ಯಾವುದೇ ಮಾತುಕತೆ ನಡೆದಿಲ್ಲ. ಹಾಗಾಗಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ' ಎಂದು ಹೇಳಿದ್ದಾರೆ.
ಸಾಮಾಜಿಕ ಮಾಧ್ಯಮಗಳಲ್ಲೂ ರಾಜೀನಾಮೆ ಪತ್ರವನ್ನು ಸ್ವಾಮಿ ಪ್ರಸಾದ್ ಮೌರ್ಯ ಹಂಚಿಕೊಂಡಿದ್ದಾರೆ.
ಉತ್ತರ ಪ್ರದೇಶದ ವಿಧಾನ ಪರಿಷತ್ ಸಭಾಪತಿಗೆ ಪ್ರತ್ಯೇಕ ಪತ್ರ ಬರೆದಿರುವ ಸ್ವಾಮಿ ಪ್ರಸಾದ್, 'ನಾನು ಸಮಾಜವಾದಿ ಪಕ್ಷದಿಂದ ರಾಜ್ಯ ವಿಧಾನ ಪರಿಷತ್ತಿಗೆ ಆಯ್ಕೆಯಾಗಿದ್ದೇನೆ. ಪಕ್ಷಕ್ಕೆ ರಾಜೀನಾಮೆ ನೀಡಿದ್ದರಿಂದ, ವಿಧಾನ ಪರಿಷತ್ ಸದಸ್ಯತ್ವಕ್ಕೂ ರಾಜೀನಾಮೆ ನೀಡುತ್ತಿದ್ದೇನೆ' ಎಂದು ಹೇಳಿದ್ದಾರೆ.