ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸ್ವಾತಿ ಮೇಲೆ ಹಲ್ಲೆ: ಮಹಿಳಾ ಆಯೋಗದ ಎದುರು ವಿಚಾರಣೆಗೆ ಹಾಜರಾಗದ ಬಿಭವ್ ಕುಮಾರ್

Published 17 ಮೇ 2024, 9:23 IST
Last Updated 17 ಮೇ 2024, 9:23 IST
ಅಕ್ಷರ ಗಾತ್ರ

ನವದೆಹಲಿ: ರಾಜ್ಯಸಭೆ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರು ರಾಷ್ಟ್ರೀಯ ಮಹಿಳಾ ಆಯೋಗದ (ಎನ್‌ಸಿಡಬ್ಲ್ಯು) ಎದುರು ಶುಕ್ರವಾರ ವಿಚಾರಣೆಗೆ ಹಾಜರಾಗಲಿಲ್ಲ.

ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಮಾಧ್ಯಮ ವರದಿಯನ್ನು ಆಧರಿಸಿ ಸ್ವಯಂಪ್ರೇರಿತವಾಗಿ ನೋಟಿಸ್‌ ನೀಡಿದ್ದ ಮಹಿಳಾ ಆಯೋಗವು, ಇಂದು (ಶುಕ್ರವಾರ) ಬೆಳಿಗ್ಗೆ 11 ಗಂಟೆಗೆ ವಿಚಾರಣೆಗೆ ಬರುವಂತೆ ಬಿಭವ್ ಕುಮಾರ್‌ಗೆ ಸೂಚಿಸಿತ್ತು. ಜತೆಗೆ, ಗೈರುಹಾಜರಾದರೆ ವ್ಯತಿರಿಕ್ತ ಪರಿಣಾಮ ಎದುರಿಸಬೇಕಾದಿತು ಎಂದು ಎಚ್ಚರಿಸಿತ್ತು.

‘ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನಿವಾಸಕ್ಕೆ ತೆರಳಿದ್ದಾಗ, ಅವರ ಕಾರ್ಯದರ್ಶಿಯಾಗಿರುವ ಬಿಭವ್ ಕುಮಾರ್ ತಮ್ಮ ಜೊತೆಗೆ ಅನುಚಿತವಾಗಿ ವರ್ತಿಸಿದ್ದು, ದೈಹಿಕವಾಗಿ ಹಲ್ಲೆ ನಡೆಸಿದ್ದರು’ ಎಂದು ಸಂಸದೆ ಸ್ವಾತಿ ಮಾಲಿವಾಲ್‌ ಅವರು ಆರೋಪಿಸಿದ್ದರು.

ಸಿ.ಎಂ ಕಚೇರಿಯಲ್ಲಿ ಪ್ರಮುಖ ಸ್ಥಾನದಲ್ಲಿರುವ ಬಿಭವ್‌ ಕುಮಾರ್ ವಿರುದ್ಧ ಕೇಳಿಬಂದ ಆರೋಪವು ಈಗ ವಿವಾದಕ್ಕೆ ತಿರುಗಿದ್ದು, ಪ್ರತಿಪಕ್ಷಗಳ ತೀವ್ರ ಟೀಕೆಗೂ ಗುರಿಯಾಗಿದೆ. ಎಎಪಿಯ ರಾಜ್ಯಸಭೆ ಸದಸ್ಯ ಸಂಜಯ್ ಸಿಂಗ್ ಅವರು ಕೂಡ ಹಲ್ಲೆ ಕೃತ್ಯವನ್ನು ಖಂಡಿಸಿದ್ದರು.

ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಈಗಾಗಲೇ ಬಿಭವ್‌ ಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಈ ಮುನ್ನ, ಹೆಚ್ಚುವರಿ ಪೊಲೀಸ್ ಆಯುಕ್ತ ಪಿ.ಎಸ್‌.ಕುಶ್ವಾಹಾ ನೇತೃತ್ವದ ದೆಹಲಿ ಪೊಲೀಸರ ತಂಡವು ಮಾಲಿವಾಲ್ ಅವರ ನಿವಾಸಕ್ಕೆ ಭೇಟಿ ನೀಡಿದ್ದು, ಮಾಲಿವಾಲ್‌ ಅವರಿಂದ ಮಾಹಿತಿ ಕಲೆಹಾಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT