ನವದೆಹಲಿ: ತಮಿಳುನಾಡಿನಲ್ಲಿ ಸರ್ಕಾರಿ ಮದ್ಯ ಮಾರಾಟ ಮಳಿಗೆಗಳನ್ನು ಮುಚ್ಚುವಂತೆ ಮದ್ರಾಸ್ ಹೈಕೋರ್ಟ್ ನೀಡಿರುವ ಆದೇಶ ಪ್ರಶ್ನಿಸಿ ತಮಿಳುನಾಡು ಸರ್ಕಾರ ಶನಿವಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.
ರಾಜ್ಯದಲ್ಲಿ ಮದ್ಯ ಮಾರಾಟ ಮಾಡುವ ಸರ್ಕಾರಿ ಸಂಸ್ಥೆ ತಮಿಳುನಾಡು ರಾಜ್ಯ ಮಾರುಕಟ್ಟೆ ಮಂಡಳಿಯು (ಟಿಎಎಸ್ಎಂಎಸಿ) ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದೆ.
'ಮದ್ಯ ಮಾರಾಟ ಮಳಿಗೆಗಳ ಹೊರಗೆ ಭಾರಿ ಸಂಖ್ಯೆಯಲ್ಲಿ ಜನರು ಸೇರುತ್ತಿದ್ದಾರೆ. ಅಂತರ ಕಾಯ್ದುಕೊಳ್ಳಬೇಕು ಎನ್ನುವ ನಿಯಮ ಉಲ್ಲಂಘನೆಯಾಗುತ್ತಿದೆ. ಆದ್ದರಿಂದ ಇವುಗಳನ್ನು ಮುಚ್ಚಬೇಕು' ಎಂದು ಮದ್ರಾಸ್ ಹೈಕೋರ್ಟ್ ಶುಕ್ರವಾರ ಆದೇಶ ಹೊರಡಿಸಿತ್ತು. ಆದರೆ ಆನ್ಲೈನ್ ಮೂಲಕ ಮದ್ಯ ಮಾರಾಟ ಮಾಡಬಹುದು ಎಂದು ಹೇಳಿದೆ.
ಕಮಲ್ ಹಾಸನ್ ನೇತೃತ್ವದ ಮಕ್ಕಳ್ ನೀದಿ ಮಯ್ಯಂ (ಎಂಎನ್ಎಂ),ವಕೀಲ ಜಿ. ರಾಜೇಶ್ ಹಾಗೂ ಹಲವರು ಸಲ್ಲಿಸಿದ್ದ ಅರ್ಜಿಗಳ ಆಧರಿಸಿ ಹೈಕೋರ್ಟ್ ಈ ಆದೇಶ ನೀಡಿದೆ.
ಮದ್ಯದಂಗಡಿಗಳ ಹೊರಗೆ ಜನದಟ್ಟಣೆ ಆಗುತ್ತಿರುವುದನ್ನು ಗಮನಿಸಿದ ಸುಪ್ರೀಂ ಕೋರ್ಟ್ ಸಹ, 'ಆನ್ಲೈನ್ ಮೂಲಕ ಮದ್ಯ ಮಾರಾಟ ಹಾಗೂ ಮನೆಬಾಗಿಲಿಗೆ ಮದ್ಯ ತಲುಪಿಸುವ ಆಯ್ಕೆಯನ್ನು ರಾಜ್ಯಗಳು ಪರಿಗಣಿಸಬಹುದು' ಎಂದು ಶುಕ್ರವಾರ ಅಭಿಪ್ರಾಯಪಟ್ಟಿತ್ತು.