ಹೈದರಾಬಾದ್: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ತೆಲಂಗಾಣದಿಂದಲೇ ಸ್ಪರ್ಧಿಸುವಂತೆ ಕೋರಲು ಪಕ್ಷದ ರಾಜ್ಯ ಘಟಕದ ರಾಜಕೀಯ ವ್ಯವಹಾರಗಳ ಸಮಿತಿಯು ಸೋಮವಾರ ನಿರ್ಣಯ ಕೈಗೊಂಡಿದೆ.
ತೆಲಂಗಾಣ ಕಾಂಗ್ರೆಸ್ ಮುಖ್ಯ ಕಚೇರಿ ಗಾಂಧಿ ಭವನದಲ್ಲಿ ಜರುಗಿದ ಸಭೆಯಲ್ಲಿ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರೂ ಪಾಲ್ಗೊಂಡಿದ್ದರು. ಸಭೆಯ ನಂತರ ಸುದ್ದಿಗಾರರಿಗೆ ಮಾಹಿತಿ ನೀಡಿದ ಮಾಜಿ ಸಚಿವ ಶಬ್ಬೀರ್ ಅಲಿ, ‘ಬರಲಿರುವ ಲೋಕಸಭಾ ಚುನಾವಣೆಯಲ್ಲಿ ತೆಲಂಗಾಣದಿಂದಲೇ ಸ್ಪರ್ಧಿಸುವಂತೆ ಪಕ್ಷದ ನಾಯಕಿ ಸೋನಿಯಾ ಗಾಂಧಿ ಅವರನ್ನು ಕೋರುವ ನಿರ್ಣಯನ್ನು ತೆಗೆದುಕೊಳ್ಳಲಾಗಿದೆ. ಈ ಕುರಿತಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆಯಲಾಗುವುದು‘ ಎಂದರು.
‘ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರೂ ಮೇದಕ್ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಸೋನಿಯಾ ಅವರೂ ಇಂದಿರಾ ಅವರಂತೆಯೇ ತೆಲಂಗಾಣವನ್ನು ಆಯ್ಕೆ ಮಾಡಿಕೊಳ್ಳಲು ಕೋರಲಾಗುವುದು. ಜತೆಗೆ ಇತ್ತೀಚಿನ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಶ್ರಮಿಸಿದ ಹಿರಿಯ ನಾಯಕರಿಗೆ ಧನ್ಯವಾದಗಳನ್ನು ಅರ್ಪಿಸಲು ನಿರ್ಣಯ ಅಂಗೀಕರಿಸಲಾಗಿದೆ’ ಎಂದು ಹೇಳಿದರು.