ಹೈದರಾಬಾದ್: ತೆಲಂಗಾಣ ರಾಜ್ಯ ಲೋಕಸೇವಾ ಆಯೋಗದ (ಟಿಎಸ್ಪಿಎಸ್ಸಿ) ಪರೀಕ್ಷೆಯ ಅಧಿಸೂಚನೆಯನ್ನು ಮುಂದೂಡಿದ್ದರಿಂದ ಮನನೊಂದು ಪರೀಕ್ಷಾ ಆಕಾಂಕ್ಷಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪ್ರವಳಿಕಾ(25) ಮೃತ ಯುವತಿ. ಅಶೋಕ ನಗರದ ಹಾಸ್ಟೆಲ್ನಲ್ಲಿ ತನ್ನ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರವಳಿಕಾ ಟಿಎಸ್ಪಿಎಸ್ಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರು. ಆಕೆಯ ಕೋಣೆಯಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಪೊಲೀಸರು ವಶಪಡಿಸಿಕೊಂಡಿದ್ದಾರೆ. 'ಕುಟುಂಬ ಸದಸ್ಯರಲ್ಲಿ ನಾನು ಕ್ಷಮೆ ಕೇಳುತ್ತೇನೆ. ನಿಮಗಾಗಿ ನನ್ನಿಂದ ಏನನ್ನೂ ಮಾಡಲು ಸಾಧ್ಯವಾಗಿಲ್ಲ' ಎಂದು ಆಕೆ ಆತ್ಮಹತ್ಯೆ ಪತ್ರದಲ್ಲಿ ಬರೆದಿದ್ದಾಳೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸರ್ಕಾರದ ವಿರುದ್ಧ ಪ್ರತಿಭಟನೆ:
ಯುವತಿ ಆತ್ಮಹತ್ಯೆ ಸುದ್ದಿ ತಿಳಿಯುತ್ತಿದ್ದಂತೆ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ ವಿದ್ಯಾರ್ಥಿಗಳು, ಶವವನ್ನು ಸ್ಥಳಾಂತರಿಸಲು ಪೊಲೀಸರಿಗೆ ಅವಕಾಶ ನೀಡದೆ ಮುಖ್ಯರಸ್ತೆ ಬಂದ್ ಮಾಡಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.