ಮುಂಬೈ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರನ್ನು ಶ್ಲಾಘಿಸಿರುವ ಶಿವಸೇನಾ, ಕೇಂದ್ರದಲ್ಲಿ ಅಧಿಕಾರದಲ್ಲಿರುವವರಿಗೆ ರಾಹುಲ್ ಕಾಂಗ್ರೆಸ್ ಅಧ್ಯಕ್ಷಗಾದಿಗೆ ಹಿಂತಿರುಗುವ ಭಯ ಕಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಗಾಂಧಿ ಕುಟುಂಬವನ್ನು ಅವಮಾನಿಸುವ ಅಭಿಯಾನವನ್ನು ಪ್ರಾರಂಭಿಸಿದ್ದಾರೆ ಎಂದು ಆರೋಪಿಸಿದೆ.
ಶಿವಸೇನಾ ತನ್ನ ಮುಖವಾಣಿ ಸಾಮ್ನಾ ಸಂಪಾದಕೀಯದಲ್ಲಿ ಈ ಬಗ್ಗೆ ಉಲ್ಲೇಖ ಮಾಡಿದೆ. ರಾಹುಲ್ ಗಾಂಧಿ ಮಗದೊಮ್ಮೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷಗಾದಿಗೆ ಹಿಂತಿರುಗುತ್ತಿದ್ದಾರೆ. ಇದು ಉತ್ತಮ ಬೆಳವಣಿಗೆ. ಬಿಜೆಪಿಗೆ ಪ್ರಧಾನಿ ನರೇಂದ್ರ ಮೋದಿಯಂತೆ ಕಾಂಗ್ರೆಸ್ಗೆ ರಾಹುಲ್ ಗಾಂಧಿಯಿಲ್ಲದೆ ಪರ್ಯಾಯ ಮಾರ್ಗವಿಲ್ಲ ಎಂದು ಹೇಳಿದೆ.
ಈ ಸತ್ಯವನ್ನು ಒಪ್ಪಿಕೊಳ್ಳಲೇಬೇಕು. ಸ್ವಲ್ಪ ಸಮಯದ ವರೆಗೆ ರಾಹುಲ್ ಗಾಂಧಿ ಹೋದ ನಂತರ, ಪಕ್ಷದ ಹಿಡಿತವು ದುರ್ಬಲಗೊಂಡಿದೆ. ಈಗ ರಾಹುಲ್ ಗಾಂಧಿ ಮತ್ತೆ ಅಧಿಕಾರಕ್ಕೆ ಮರಳುತ್ತಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಹುದ್ದೆಯನ್ನು ವಹಿಸಲು ರಾಹುಲ್ ಗಾಂಧಿ ತಯಾರಾಗಿದ್ದಾರೆ ಎಂದು ಉಲ್ಲೇಖಿಸಿದೆ.
ರಾಹುಲ್ ಗಾಂಧಿ ಅವರನ್ನು ದುರ್ಬಲ ನಾಯಕ ಎಂದು ಬಿಂಬಿಸುವ ಪ್ರಯತ್ನಗಳು ನಡೆಸಲಾಗುತ್ತಿದೆ ಎಂದು ಸಂಪಾದಕೀಯದಲ್ಲಿ ಆರೋಪಿಸಲಾಗಿದೆ.
ದೆಹಲಿಯಲ್ಲಿ ಅಧಿಕಾರದಲ್ಲಿರುವವರಿಗೆ ರಾಹುಲ್ ಗಾಂಧಿ ಬಗ್ಗೆ ಭಯ ಕಾಡುತ್ತಿದೆ. ಹಾಗಿಲ್ಲವಾದರೆ ಗಾಂಧಿ ಕುಟುಂಬವನ್ನು ದೂಷಿಸುವ ಅನಗತ್ಯ ಅಭಿಯಾನವನ್ನು ಪ್ರಾರಂಭಿಸುತ್ತಿರಲಿಲ್ಲ ಎಂದು ತಿಳಿಸಿದೆ.