ಮಥುರಾ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸುತ್ತಿರುವವರಿಗೆ ತಲೆಕೆಟ್ಟಿದೆ ಮತ್ತು ಅವರಿಗೆ ಚಿಕಿತ್ಸೆಯ ಅಗತ್ಯವಿದೆ ಎಂದು ಉತ್ತರ ಪ್ರದೇಶ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯಹೇಳಿದರು.
ಬೃಂದಾವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ’ಪೌರತ್ವ ಕಿತ್ತುಕೊಳ್ಳುವುದಕ್ಕಾಗಿ ಕಾಯ್ದೆಗೆ ತಿದ್ದುಪಡಿ ಮಾಡಿಲ್ಲ. ಬದಲಿಗೆ ನೆರೆ ರಾಷ್ಟ್ರಗಳಲ್ಲಿ ದೌರ್ಜನ್ಯಕ್ಕೆ ಒಳಗಾಗಿರುವ ಅಲ್ಪಸಂಖ್ಯಾತರಿಗೆ ಪೌರತ್ವ ನೀಡುವುದಕ್ಕಾಗಿ ರೂಪಿಸಲಾಗಿದೆ’ ಎಂದು ಅವರು ತಿಳಿಸಿದರು.
‘ಯಾರು ಈ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸುತ್ತಿದ್ದಾರೊ ಅವರಿಗೆ ಮತಿಭ್ರಮಣೆಯಾಗಿದೆ. ಅಂತಹವರು ಚಿಕಿತ್ಸೆ ಪಡೆಯಬೇಕು’ ಎಂದು ವ್ಯಂಗ್ಯವಾಡಿದರು.
ಸಿಎಎ ಅಂಗೀಕಾರವಾದ ನಂತರ ದೇಶದಾದ್ಯಂತ ಅದನ್ನು ವಿರೋಧಿಸಿ ಪ್ರತಿಭಟನೆಗಳು ನಡೆಯುತ್ತಿವೆ. ಜೊತೆಗೆ ಉತ್ತರ ಪ್ರದೇಶ ಸೇರಿ ವಿವಿಧೆಡೆ ಹಿಂಸಾಚಾರಕ್ಕೂ ಎಡೆಮಾಡಿಕೊಟ್ಟಿತ್ತು. ಈ ಗಲಭೆಯಲ್ಲಿ ಸುಮಾರು 20 ಮಂದಿ ಮೃತಪಟ್ಟಿದ್ದಾರೆ.