ನವದೆಹಲಿ: ಕೋಲ್ಕತ್ತದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದ್ದಾರೆ ಎಂದು ಆರೋಪಿಸಿ ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ ಆನಂದ ಬೋಸ್ ವಿರುದ್ಧ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಚುನಾವಣಾ ಆಯೋಗಕ್ಕೆ ಗುರುವಾರ ದೂರು ಸಲ್ಲಿಸಿದೆ.
ಕೋಲ್ಕತ್ತದ ರಾಮ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲರು ತಮ್ಮ ಎದೆಯ ಮೇಲೆ ಬಿಜೆಪಿ ಪಕ್ಷದ ಚಿಹ್ನೆಯನ್ನು ಧರಿಸಿದ್ದಾರೆ ಎಂದು ಮುಖ್ಯ ಚುನಾವಣಾ ಆಯುಕ್ತರಿಗೆ ನೀಡಿದ ದೂರಿನಲ್ಲಿ ಟಿಎಂಸಿ ಆರೋಪಿಸಿದೆ.
ರಾಜ್ಯಪಾಲ ಆನಂದ ಬೋಸ್ ಅವರು ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡಲು ತಮ್ಮ ಹುದ್ದೆಯನ್ನು ದುರ್ಬಳಕೆ ಮಾಡಿಕೊಂಡಿರುವುದನ್ನು ನಿಮ್ಮ ಗಮನಕ್ಕೆ ತಂದಿದ್ದೇವೆ ಎಂದು ಟಿಎಂಸಿ ತನ್ನ ದೂರಿನಲ್ಲಿ ಉಲ್ಲೇಖಿಸಿದೆ.
ರಾಜ್ಯಪಾಲರ ನಡವಳಿಕೆ ಪ್ರಜಾಸತ್ತಾತ್ಮಕವಲ್ಲ. ಅವರು ಸಾಂವಿಧಾನಿಕ ಮೌಲ್ಯಗಳ ಉಲ್ಲಂಘನೆ ಮಾತ್ರವಲ್ಲದೆ ರಾಜ್ಯದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು ದುರ್ಬಲಗೊಳಿಸುತ್ತಿದ್ದಾರೆ ಎಂದು ಟಿಎಂಸಿ ಹೇಳಿದೆ.