ಎಎಪಿ ಸಂಸದ ಸಂಜಯ್ ಸಿಂಗ್ ಬಂಧನ, ಏಷ್ಯನ್ ಗೇಮ್ಸ್ನ ಜಾವೆಲಿನ್ ಸ್ಪರ್ಧೆಯಲ್ಲಿ ನೀರಜ್ ಚೋಪ್ರಾಗೆ ಚಿನ್ನ, ನೊಬೆಲ್ ಪ್ರಶಸ್ತಿ ಪ್ರಕಟ, ಉಜ್ವಲ ಯೋಜನೆಯಡಿ ಸಬ್ಸಿಡಿ ಹೆಚ್ಚಳ, ಲಾಲೂ ಪ್ರಸಾದ್ ಕುಟುಂಬಕ್ಕೆ ಜಾಮೀನು, ರಣಬೀರ್ ಕಪೂರ್ಗೆ ಇ.ಡಿ ನೋಟಿಸ್ ಸೇರಿದಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..............
ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಅವರನ್ನು ಜಾರಿ ನಿರ್ದೇಶನಾಲಯ(ಇ.ಡಿ) ಬುಧವಾರ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಿಗ್ಗೆಯಿಂದ ಅವರ ಮನೆಯಲ್ಲಿ ಇ.ಡಿ ಶೋಧ ಕಾರ್ಯಾಚರಣೆ ನಡೆಸಿತ್ತು.
‘ಕ್ವಾಂಟಮ್ ಡಾಟ್ಸ್’ ಎಂದು ಕರೆಯಲಾಗುವ ಅತ್ಯಂತ ಚಿಕ್ಕ ಕಣಗಳ ಕುರಿತು ನಡೆಸಿದ ಸಂಶೋಧನೆಗಾಗಿ ಅಮೆರಿಕದ ಮೂವರು ರಸಾಯನ ವಿಜ್ಞಾನಿಗಳಿಗೆ 2023ರ ನೊಬೆಲ್ ಪ್ರಶಸ್ತಿ ಘೋಷಣೆಯಾಗಿದೆ. ಎಂಐಟಿಯ ಮೌಂಗಿ ಬಾವೆಂಡಿ, ಕೊಲಂಬಿಯಾ ವಿಶ್ವವಿದ್ಯಾಲಯದ ಲೂಯಿಸ್ ಬ್ರುಸ್ ಹಾಗೂ ನ್ಯಾನೊ ಕ್ರಿಸ್ಟಲ್ ಟೆಕ್ನಾಲಜಿಯ ಅಲೆಕ್ಸಿ ಎಕಿಮೊವ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಏಷ್ಯನ್ ಗೇಮ್ಸ್ 2023ರ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಭಾರತದ ನೀರಜ್ ಚೋಪ್ರಾ ಚಿನ್ನ ಮತ್ತು ಕಿಶೋರ್ ಜೇನಾ ಬೆಳ್ಳಿ ಪದಕ ಜಯಿಸಿದ್ದಾರೆ. ಈ ಮೂಲಕ ಜಾವೆಲಿನ್ ಸ್ಪರ್ಧೆಯಲ್ಲಿ ಭಾರತೀಯ ಸ್ಪರ್ಧಿಗಳು ಅಮೋಘ ಸಾಧನೆ ಮಾಡಿದ್ದಾರೆ.
ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ (ಪಿಎಂಯುವೈ) ಅಡಿ ಪ್ರತಿ ಎಲ್ಪಿಜಿ ಸಿಲಿಂಡರ್ಗೆ ನೀಡುವ ₹ 200 ಸಬ್ಸಿಡಿಯನ್ನು ₹300ಕ್ಕೆ ಹೆಚ್ಚಳ ಮಾಡಿದೆ. ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ.
ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲ್ಲೂಕಿನ ಅಗರ ಗ್ರಾಮದಲ್ಲಿ ಸುಮಾರು 35 ವರ್ಷಗಳಿಂದ ಬಹಿಷ್ಕಾರಕ್ಕೆ ಒಳಗಾಗಿದ್ದ ಮಹಿಳೆ ಸಾಕಮ್ಮ ಅವರು ‘ಪ್ರಜಾವಾಣಿ’ ವರದಿ ಫಲಶ್ರುತಿಯಿಂದಾಗಿ ಸ್ವಗ್ರಾಮಕ್ಕೆ ಬಂದಿದ್ದಾರೆ. ಬಹಿಷ್ಕಾರ ಕುರಿತು ಗ್ರಾಮದಲ್ಲಿ ಬುಧವಾರ ನಡೆದ ಶಾಂತಿಸಭೆಯು ಇಂತಹದ್ದೊಂದು ಬೆಳವಣಿಗೆಗೆ ಕಾರಣವಾಯಿತು.
ರೈಲ್ವೆ ಇಲಾಖೆಯ ಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಆರ್ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್, ಅವರ ಪತ್ನಿ ರಾಬಡಿ ದೇವಿ ಹಾಗೂ ಪುತ್ರ, ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರಿಗೆ ದೆಹಲಿ ನ್ಯಾಯಾಲಯ ಬುಧವಾರ ಜಾಮೀನು ಮಂಜೂರು ಮಾಡಿದೆ.
ಬೆಟ್ಟಿಂಗ್ ಆ್ಯಪ್ಗೆ ಸಂಬಂಧಿಸಿದಂತೆ ಬಾಲಿವುಡ್ ನಟ ರಣಬೀರ್ ಕಪೂರ್ಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದೆ. ಮಹಾದೇವ್ ಆನ್ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ ದೇಶದ ಹಲವು ನಗರಗಳಲ್ಲಿ ಶೋಧ ಕಾರ್ಯ ನಡೆಸಿತ್ತು.
ಕೋವಿಡ್ ಪಿಡುಗಿನ ನಂತರ ಜಾರಿಯಲ್ಲಿದ್ದ ಆರ್ಥಿಕ ನೆರವು ಯೋಜನೆಯಡಿ ಸಾಲ ಪಡೆದು ಕೋಟ್ಯಂತರ ರೂಪಾಯಿ ವಂಚಿಸಿ, ಅಕ್ರಮವಾಗಿ ವರ್ಗಾವಣೆ ಮಾಡಿದ ಪ್ರಕರಣದಲ್ಲಿ ಭಾರತ ಮೂಲದ ಇಬ್ಬರನ್ನು ದೋಷಿಗಳು ಎಂದು ನ್ಯಾಯಾಂಗ ತಿಳಿಸಿದೆ. ಸಾಲ ಪಡೆಯುವುದಕ್ಕಾಗಿ ಸುಳ್ಳು ಅರ್ಜಿಗಳನ್ನು ಸಲ್ಲಿಸಿದ್ದಾಗಿ ಆರೋಪಿಗಳಿಬ್ಬರು ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ವಾಹನಗಳ ಅತಿಯಾದ ವೇಗ ಹಾಗೂ ಸಂಚಾರ ನಿಯಮ ಉಲ್ಲಂಘನೆ ಮೇಲೆ ಕಣ್ಗಾವಲು ಇಡಲು ರಾಜ್ಯದ ಪ್ರಮುಖ ಹೆದ್ದಾರಿಗಳಲ್ಲಿ ಎ.ಐ (ಕೃತಕ ಬುದ್ಧಿಮತ್ತೆ) ಕ್ಯಾಮೆರಾ ಅಳವಡಿಸಲು ಸಾರಿಗೆ ಇಲಾಖೆ ಮುಂದಾಗಿದೆ. ಈ ತಿಂಗಳ ಅಂತ್ಯದ ವೇಳೆಗೆ ಆರು ಹೆದ್ದಾರಿಗಳಲ್ಲಿ ಪ್ರಾಯೋಗಿಕವಾಗಿ ಈ ಯೋಜನೆ ಅನುಷ್ಠಾನಕ್ಕೆ ಬರಲಿದೆ.
ನಾಗ್ಪುರದಲ್ಲಿರುವ ಎರಡು ಸರ್ಕಾರಿ ಆಸ್ಪತ್ರೆಗಳಲ್ಲಿ ಬುಧವಾರ ಬೆಳಿಗ್ಗೆ 8ಕ್ಕೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ಒಟ್ಟು 23 ರೋಗಿಗಳು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ (ಜಿಎಂಸಿಎಚ್) 14 ರೋಗಿಗಳು, ಇಂದಿರಾಗಾಂಧಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ (ಐಜಿಜಿಎಂಸಿಎಚ್) 9 ರೋಗಿಗಳು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.