ಅಗರ್ತಲಾ: ರಾಮ ಮಂದಿರದ ಉದ್ಘಾಟನೆ ಕಾರ್ಯಕ್ರಮವನ್ನು ವೀಕ್ಷಿಸಲು ರಾಜ್ಯದ ಯಾತ್ರಾರ್ಥಿಗಳಿಗಾಗಿ ಅಗರ್ತಲಾದಿಂದ ಅಯೋಧ್ಯೆಗೆ ವಿಶೇಷ ರೈಲು ಒದಗಿಸುವಂತೆ ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಹಾ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಜನವರಿ 22ರಂದು ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಮಮಂದಿರವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಈ ಮಹತ್ವದ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯದ ಹೆಚ್ಚಿನ ಸಂಖ್ಯೆಯ ಭಕ್ತರು ಉತ್ಸುಕರಾಗಿದ್ದಾರೆ. ತ್ರಿಪುರಾದಿಂದ ಸುಮಾರು 2,000 ಮಂದಿ ಭಕ್ತರು ಈ ಶುಭ ಸಂದರ್ಭದಲ್ಲಿ ಪಾಲ್ಗೊಳ್ಳಲು ಯೋಜಿಸಿದ್ದಾರೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಬರೆದ ಪತ್ರದಲ್ಲಿ ಸಿಎಂ ಉಲ್ಲೇಖಿಸಿದ್ದಾರೆ.
ಜನವರಿ 20 ರಂದು ಅಗರ್ತಲಾದಿಂದ ಅಯೋಧ್ಯೆಗೆ ವಿಶೇಷ ರೈಲು ಮತ್ತು ಜನವರಿ 23ರಂದು ವಾಪಸ್ ಆಗಲು ರೈಲು ಸೇವೆ ಒದಗಿಸಲು ರೈಲ್ವೆ ಇಲಾಖೆಗೆ ನಿರ್ದೇಶನ ನೀಡುವಂತೆ ಸಿಎಂ, ವೈಷ್ಣವ್ ಅವರಿಗೆ ಮನವಿ ಮಾಡಿದ್ದಾರೆ.
ಅಯೋಧ್ಯೆ ರಾಮಮಂದಿರ ಉದ್ಘಾಟನೆ ಲಕ್ಷಾಂತರ ಭಾರತೀಯರಿಗೆ ಸಾಂಸ್ಕೃತಿಕ ಮತ್ತು ಧಾರ್ಮಿಕ ಮಹತ್ವವನ್ನು ಒತ್ತಿ ಹೇಳುತ್ತದೆ. ಈ ಮಹತ್ವದ ಸಂದರ್ಭ ರಾಷ್ಟ್ರದ ಏಕತೆ, ಸಾಮರಸ್ಯ ಮತ್ತು ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಸಂಕೇತಿಸುತ್ತದೆ ಎಂದು ಮಾಣಿಕ್ ಸಹಾ ಹೇಳಿದರು.