ಕೋಲ್ಕತ್ತ: ಪಶ್ಚಿಮ ಬಂಗಾಳದ ಜಲಪಾಯಿಗುಡಿ ಜಿಲ್ಲೆಯಲ್ಲಿ ಒಟ್ಟೊಟ್ಟಾಗಿ ನೂರಾರು ಜನರು ಲಸಿಕಾ ಕೇಂದ್ರಕ್ಕೆ ಪ್ರವೇಶಿಸಲು ಪ್ರಯತ್ನಿಸಿದ ಸಂದರ್ಭ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 25 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅವರಲ್ಲಿ ಆರು ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಅವರು ಜಲಪಾಯಿಗುಡಿಯ ಸದರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
‘ಧುಪ್ಗುರಿ ಆರೋಗ್ಯ ಕೇಂದ್ರದ ಮುಖ್ಯ ಗೇಟ್ ತೆರೆದ ತಕ್ಷಣ, ಹಲವಾರು ಜನರು ಒಟ್ಟಿಗೆ ಪ್ರವೇಶಿಸಲು ಪ್ರಯತ್ನಿಸಿದರು. ಹಾಗಾಗಿ, ಕಾಲ್ತುಳಿತದಂತಹ ಪರಿಸ್ಥಿತಿ ಉಂಟಾಯಿತು. ಘಟನೆಯಲ್ಲಿ ಹಲವಾರು ಮಹಿಳೆಯರು ಗಾಯಗೊಂಡರು. ನಾವು ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ’ ಎಂದು ಅಧಿಕಾರಿ ಹೇಳಿದರು.
ಬೆಳಗ್ಗೆಯಿಂದಲೇ ನೂರಾರು ಜನರು ಲಸಿಕೆ ಕೇಂದ್ರದ ಹೊರಗೆ ಸರತಿ ಸಾಲಿನಲ್ಲಿ ನಿಂತಿದ್ದರು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಪ್ರೋಟೊಕಾಲ್ ಗಾಳಿಗೆ ತೂರಲಾಗಿತ್ತು ಎಂದು ಸ್ಥಳೀಯರು ಹೇಳಿದ್ದಾರೆ.
ಕಾಲ್ತುಳಿತಕ್ಕೆ ಕಾರಣವೇನು ಎಂದು ಕೇಳಿದಾಗ, ‘ನಾವು ಈ ವಿಷಯವನ್ನು ತನಿಖೆ ಮಾಡುತ್ತಿದ್ದೇವೆ. ಪ್ರಾಥಮಿಕ ತನಿಖೆಯ ಪ್ರಕಾರ, ಕ್ಯೂನಲ್ಲಿದ್ದವರು ಲಸಿಕೆಕೊರತೆಯ ಆತಂಕದಲ್ಲಿ ಕೇಂದ್ರವನ್ನು ಪ್ರವೇಶಿಸಲು ಪ್ರಯತ್ನಿಸಿದ್ದರು. ಘಟನೆಯ ನಂತರ ಲಸಿಕಾ ಕಾರ್ಯಕ್ರಮವನ್ನು ನಿಲ್ಲಿಸಲಾಗಿದೆ ಎಂದು ಅಧಿಕಾರಿ ಹೇಳಿದರು.