ನವದೆಹಲಿ: ಮಣಿಪುರ ಕೃತ್ಯಕ್ಕೆ ಸಮಾನವಾಗಿ ಪಶ್ಚಿಮ ಬಂಗಾಳದಲ್ಲೂ ಬುಡಕಟ್ಟು ಜನಾಂಗದ ಇಬ್ಬರು ಮಹಿಳೆಯರನ್ನು ಬೆತ್ತಲುಗೊಳಿಸಿ, ಲೈಂಗಿಕ ದೌರ್ಜನ್ಯ ನಡೆಸಲಾಗಿದೆ ಎಂದು ಬಿಜೆಪಿ ಶನಿವಾರ ಆರೋಪಿಸಿದೆ.
ಈ ಕುರಿತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಅಲ್ಲಿನ ಸರ್ಕಾರದ ವಿರುದ್ದ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಗಂಭೀರ ಆರೋಪ ಮಾಡಿದ್ದಾರೆ.
ಕೃತ್ಯ ಸಂಬಂಧ ವಿಡಿಯೊ ಹಂಚಿರುವ ಮಾಳವೀಯ, ಜುಲೈ 19ರಂದು ಈ ಘಟನೆ ನಡೆದಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಮಣಿಪುರ: ಮಹಿಳೆಯರನ್ನು ಬೆತ್ತಲುಗೊಳಿಸಿ ಮೆರವಣಿಗೆ; ಐದನೇ ಆರೋಪಿ ಬಂಧನ
ಪಶ್ಚಿಮ ಬಂಗಾಳದಲ್ಲಿ ಭೀಕರತೆ ಮುಂದುವರಿದಿದೆ. ಇಬ್ಬರು ಬುಡಕಟ್ಟು ಮಹಿಳೆಯರನ್ನು ಬೆತ್ತಲೆಯಾಗಿಸಿ, ನಿರ್ದಯವಾಗಿ ಥಳಿಸಲಾಗಿದೆ. ಪೊಲೀಸರು ಕೂಡ ಮೂಕ ಪ್ರೇಕ್ಷಕರಾಗಿದ್ದರು ಎಂದು ಆರೋಪಿಸಿದ್ದಾರೆ.
ಬಂಗಾಳದ ಗೃಹ ಸಚಿವರೂ ಆಗಿರುವ ಮಮತಾ, ಈ ಅಮಾನವೀಯ ಕೃತ್ಯದ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಅಥವಾ ಖಂಡಿಸಲಿಲ್ಲ. ಮುಖ್ಯಮಂತ್ರಿಯಾಗಿ ಅವರ ವೈಫಲ್ಯವನ್ನು ಇದು ತೋರಿಸುತ್ತದೆ ಎಂದು ಹೇಳಿದ್ದಾರೆ.
ಮಣಿಪುರ ಕೃತ್ಯದ ಬಗ್ಗೆ ಮಮತಾ ಕಣ್ಣೀರು ಸುರಿಸುವ ಹಿಂದೆ ರಾಜಕೀಯ ದುರುದ್ದೇಶ ಅಡಗಿದೆ ಎಂದು ವಾಗ್ದಾಳಿ ಮಾಡಿದ್ದಾರೆ.
ಮಣಿಪರದ ಕಾಂಗ್ಪೊಕ್ಪಿ ಜಿಲ್ಲೆಯಲ್ಲಿ ಮೇ 4ರಂದು ನಡೆದಿದ್ದ ಹಿಂಸಾಚಾರದ ವೇಳೆ ಮಹಿಳೆಯರನ್ನು ಬೆತ್ತಲುಗೊಳಿಸಿ, ಮೆರವಣಿಗೆ ಮಾಡಿ, ಲೈಂಗಿಕ ದೌರ್ಜನ್ಯ ನಡೆಸಿದ ವಿಡಿಯೊ ಜುಲೈ 19ರಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು. ಇದರಿಂದ ಈಶಾನ್ಯ ರಾಜ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನಗೊಂಡಿತ್ತು. ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಕೃತ್ಯಕ್ಕೆ ದೇಶದಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.