ಡೆಹರಾಡೂನ್: 'ಏಕರೂಪ ನಾಗರಿಕ ಸಂಹಿತೆ ಮಸೂದೆ'(UCC)ಯನ್ನು ಮಂಗಳವಾರ ಉತ್ತರಾಖಂಡ ವಿಧಾನಸಭೆಯಲ್ಲಿ ಮಂಡಿಸಲಾಯಿತು.
ಈ ಮಸೂದೆಯಡಿ ವಿವಾಹ, ವಿಚ್ಛೇದನ, ಆಸ್ತಿ, ಉತ್ತರಾಧಿಕಾರ, ದತ್ತು ಸ್ವೀಕಾರ ಮೊದಲಾದ ವಿಷಯಗಳಿಗೆ ಸಂಬಂಧಿಸಿದಂತೆ ಎಲ್ಲಾ ಧಾರ್ಮಿಕ ಸಮುದಾಯಗಳಿಗೆ ಒಂದೇ ಕಾನೂನು ಅನ್ವಯವಾಗಲಿದೆ.
ಸಂವಿಧಾನದ ಮೂಲ ಪ್ರತಿಯೊಂದಿಗೆ ವಿಧಾನಸಭೆ ಪ್ರವೇಶಿಸಿದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಸದನದಲ್ಲಿ ಏಕರೂಪ ನಾಗರಿಕ ಸಂಹಿತೆ ವಿಧೇಯಕವನ್ನು ಮಂಡಿಸಿದರು.
ಯುಸಿಸಿ ಮಸೂದೆಯ ಮಂಡನೆಯನ್ನು ಜೈ ಶ್ರೀ ರಾಮ್ ಮತ್ತು ವಂದೇ ಮಾತರಂ ಘೋಷಣೆಗಳೊಂದಿಗೆ ಸ್ವಾಗತಿಸಲಾಯಿತು. ಅಂಗೀಕಾರಕ್ಕೂ ಮುನ್ನ ಮಸೂದೆ ವಿಧಾನಸಭೆಯಲ್ಲಿ ಚರ್ಚೆಯಾಗಲಿದೆ.
ವಿಧಾನಸಭೆಯಲ್ಲಿ ಈ ಮಸೂದೆ ಅಂಗೀಕಾರವಾದರೆ ಉತ್ತರಾಖಂಡ ರಾಜ್ಯವು ಏಕರೂಪ ನಾಗರಿಕ ಸಂಹಿತೆ ಮಸೂದೆಯನ್ನು ಜಾರಿಗೊಳಿಸಿದ ದೇಶದ ಮೊದಲ ರಾಜ್ಯವಾಗಲಿದೆ.