ಲಖನೌ: ಉತ್ತರಪ್ರದೇಶದಲ್ಲಿ 23 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಮತ್ತು ಬಲವಂತವಾಗಿ ಗರ್ಭಪಾತ ಮಾಡಿಸಿದ ಆರೋಪದ ಮೇರೆಗೆ ಭಯೋತ್ಪಾದನಾ ನಿಗ್ರಹ ದಳದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆಗಿರುವ ರಾಹುಲ್ ಶ್ರೀವಾಸ್ತವ (ಎಎಸ್ಪಿ) ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಯುಪಿಎಸ್ಸಿ ಪರೀಕ್ಷೆ ಸಿದ್ಧತೆಯಲ್ಲಿ ತೊಡಗಿದ್ದ ಸಂತ್ರಸ್ತೆಯು ಐದು ವರ್ಷಗಳ ಹಿಂದೆ ರಾಹುಲ್ ಶ್ರೀವಾಸ್ತವ ಅವರೊಂದಿಗೆ ಸಂಪರ್ಕದಲ್ಲಿದ್ದರು.
‘ಆರೋಪಿಯು ಹಲವು ವರ್ಷ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. 2023ರಲ್ಲಿ ಬಲವಂತದಿಂದ ಗರ್ಭಪಾತ ಮಾಡಿಸಿದ್ದಾನೆ. ಅಲ್ಲದೆ, ನನ್ನ ಖಾಸಗಿ ವಿಡಿಯೊಗಳನ್ನು ಇಟ್ಟುಕೊಂಡು, ತನ್ನನ್ನು ಬೆದರಿಸುತ್ತಿದ್ದ’ ಎಂದು ಸಂತ್ರಸ್ತೆ ದೂರಿದ್ದಾರೆ.
ಪೊಲೀಸ್ ಅಧಿಕಾರಿ ಎಸಗಿದ ದೌರ್ಜನ್ಯಗಳಿಗೆ ಸಂಬಂಧಿಸಿದ ಸಾಕ್ಷ್ಯಾಧಾರಗಳು ತನ್ನ ಬಳಿಯಿದ್ದು, ಎಎಸ್ಪಿ ಅವರನ್ನು ಅಮಾನತು ಮಾಡಬೇಕು ಎಂದು ಸಂತ್ರಸ್ತೆ ಒತ್ತಾಯಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಆರೋಪಿ ಸ್ಥಾನದಲ್ಲಿರುವ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮೂರು ತಿಂಗಳಿನಿಂದಲೂ ಒತ್ತಾಯಿಸುತ್ತಿರುವ ಸಂತ್ರಸ್ತೆಯು, ಈ ವಿಚಾರವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಆ ಬಳಿಕ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.