ನವದೆಹಲಿ: ಉದ್ಯೋಗ ಸೃಷ್ಟಿ, ರೈತರಿಗೆ ಬಾಕಿ ನೀಡುವುದು ಮತ್ತು ಬೆಲೆ ಏರಿಕೆಯನ್ನು ನಿಯಂತ್ರಿಸುವಂತಹ ಹಲವು ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಬಿಜೆಪಿ ಸೋತಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಉತ್ತರ ಪ್ರದೇಶದ ಬಿಜೆಪಿ ಸರ್ಕಾರವನ್ನು ಟೀಕಿಸಿದ್ದಾರೆ.
ಉತ್ತರ ಪ್ರದೇಶ ಸರ್ಕಾರವು ನಾಲ್ಕೂವರೆ ವರ್ಷದ ಅಧಿಕಾರ ಅವಧಿಯಲ್ಲಿ ಜನರ ಈ ಸಮಸ್ಯೆಗಳನ್ನು ಪರಿಹರಿಸಬೇಕಿತ್ತು. ಆದರೆ, ಅದು ಕೇವಲ ಸುಳ್ಳುಗಳನ್ನೇ ಹೆಚ್ಚಾಗಿ ಮುಂದುವರೆಸಿಕೊಂಡು ಬರುತ್ತಿದೆ ಎಂದು ಅವರು ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಉತ್ತರ ಪ್ರದೇಶದ ಅಭಿವೃದ್ಧಿ ಬಗ್ಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ನೀಡಿರುವ ಹೇಳಿಕೆಗಳನ್ನು ಉಲ್ಲೇಖಿಸಿದ್ದಾರೆ.
‘ಲಕ್ಷ ಜನರಿಗೆ ಉದ್ಯೋಗ ನೀಡಿ ಖಾಲಿ ಹುದ್ದೆಗಳ ಭರ್ತಿ ಮಾಡುವುದು, ಕಬ್ಬು, ಗೋಧಿ, ಭತ್ತ, ಆಲೂಗಡ್ಡೆ ಬೆಳೆಗಳ ಮೇಲಿನ ರೈತರ ಬಾಕಿ ಹಣ ನೀಡುವುದು, ವಿದ್ಯುತ್ ದರ ಕಡಿಮೆ ಮಾಡುವುದು ಮತ್ತು ಬೆಲೆ ಏರಿಕೆ ನಿಯಂತ್ರಿಸುವಲ್ಲಿ ಉತ್ತರ ಪ್ರದೇಶ ಸರ್ಕಾರವು ವಿಫಲವಾಗಿದೆ’ ಎಂದು ಟ್ವೀಟ್ ಮಾಡಿದ್ದಾರೆ.
‘ಬಿಜೆಪಿ ಸರ್ಕಾರವು ಉತ್ತರ ಪ್ರದೇಶಕ್ಕೆ ಏನು ಮಾಡಿದೆ? ಅಪೌಷ್ಟಿಕತೆ, ಮಹಿಳೆಯರ ಮೇಲಿನ ಅಪರಾಧ, ಅಪಹರಣ, ಕೊಲೆ ಪ್ರಕರಣಗಳು ಮತ್ತು ದಲಿತರ ಮೇಲಿನ ದೌರ್ಜನ್ಯಗಳಲ್ಲಿ ರಾಜ್ಯ ಮೊದಲನೆ ಸ್ಥಾನ ಪಡೆಯುವಂತೆ ಮಾಡಿದೆ’ ಎಂದು ಮತ್ತೊಂದು ಟ್ವೀಟ್ನಲ್ಲಿ ಆರೋಪಿಸಿದ್ದಾರೆ.