ನಾಗ್ಪುರ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಹಾ ವಿಕಾಸ ಆಘಾಡಿ (ಎಂವಿಎ) ಜತೆಗೆ ಮೈತ್ರಿ ಸಾಧ್ಯವಾಗದಿದ್ದರೆ, ತಮ್ಮ ಪಕ್ಷವು ಮಹಾರಾಷ್ಟ್ರದ 46 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದು ವಂಚಿತ ಬಹುಜನ ಆಘಾಡಿ (ವಿಬಿಎ) ಮುಖ್ಯಸ್ಥ ಪ್ರಕಾಶ್ ಅಂಬೇಡ್ಕರ್ ಹೇಳಿದ್ದಾರೆ.
ಎಂವಿಎ ಮೈತ್ರಿಯಲ್ಲಿರುವ ಇತರ ಎರಡು ಪಕ್ಷಗಳಾದ ಶಿವಸೇನಾ (ಯುಬಿಟಿ) ಮತ್ತು ಕಾಂಗ್ರೆಸ್ ನಡುವೆ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ‘ಹಗ್ಗಜಗ್ಗಾಟ’ ಮುಂದುವರಿದಿದೆ ಎಂದು ಅವರು ತಿಳಿಸಿದರು. ಎಂವಿಎ ಮೈತ್ರಿಕೂಟದ ಪಕ್ಷಗಳು ಸೀಟು ಹಂಚಿಕೆ ಪ್ರಕ್ರಿಯೆ ಪೂರ್ಣಗೊಳಿಸಿದೆ ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್ ಈಚೆಗೆ ಹೇಳಿದ್ದರು. ಅದರ ಬೆನ್ನಲ್ಲೇ ಪ್ರಕಾಶ್ ಅಂಬೇಡ್ಕರ್ ಹೇಳಿಕೆ ಹೊರಬಿದ್ದಿದೆ.
‘ಶಿವಸೇನಾ (ಯುಬಿಟಿ) ಮತ್ತು ಕಾಂಗ್ರೆಸ್ ನಡುವಣ ಸೀಟು ಹಂಚಿಕೆ ಗೊಂದಲ ಬಗೆಹರಿದ ಬಳಿಕವಷ್ಟೇ ನಮ್ಮ ಜತೆ ಮಾತುಕತೆ ಆರಂಭವಾಗಲಿದೆ. ಮಹಾರಾಷ್ಟ್ರದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದರೂ ಆರು ಸ್ಥಾನಗಳನ್ನು ಗೆಲ್ಲುವ ಶಕ್ತಿ ನಮ್ಮ ಪಕ್ಷಕ್ಕಿದೆ‘ ಎಂದು ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮಹಾರಾಷ್ಟ್ರದಲ್ಲಿ 48 ಲೋಕಸಭಾ ಕ್ಷೇತ್ರಗಳಿದ್ದು, ಅತಿಹೆಚ್ಚು ಕ್ಷೇತ್ರಗಳಿರುವ ರಾಜ್ಯಗಳ ಪೈಕಿ ಉತ್ತರ ಪ್ರದೇಶದ (80) ಬಳಿಕ ಎರಡನೇ ಸ್ಥಾನದಲ್ಲಿದೆ.