ಭೋಪಾಲ್: ಮಧ್ಯಪ್ರದೇಶ ವಿಧಾನಸಭೆ ಚುನಾವಣೆಗೆ ಮೂಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ 144 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಬಿಜೆಪಿ 136 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ.
ರಾಮಾಯಣದಲ್ಲಿ ಹನುಮಾನ್ ಪಾತ್ರ ನಿರ್ವಹಿಸಿ ಜನಪ್ರಿಯತೆ ಗಳಿಸಿದ್ದ ವಿಕ್ರಮ್ ಮಸ್ತಲ್ ಅವರನ್ನು ಬುಧ್ನಿ ಕ್ಷೇತ್ರದಿಂದ ಕಾಂಗ್ರೆಸ್ ಕಣಕ್ಕಿಳಿಸಿದ್ದು, ಆ ಮೂಲಕ ಹಾಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ತೀವ್ರ ಪೈಪೋಟಿ ನೀಡಲು ನಿರ್ಧರಿಸಿದೆ.
ವಿಕ್ರಮ್ ಮಸ್ತಲ್ ಇದೇ ಜುಲೈನಲ್ಲಿ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದರು.
ಬುಧ್ನಿ ವಿಧಾನಸಭಾ ಕ್ಷೇತ್ರವು ಬಿಜೆಪಿಯ ಭದ್ರಕೋಟೆಯಾಗಿದೆ. ಚೌಹಾಣ್ ಅವರು ಈ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದು, 2018ರ ಚುನಾವಣೆಯಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಅರುಣ್ ಯಾದವ್ ಅವರನ್ನು 58,999 ಮತಗಳ ಅಂತರದಿಂದ ಸೋಲಿಸಿದ್ದರು.
ಚೌಹಾಣ್ ಅವರಿಗೆ ಪ್ರಬಲ ಪೈಪೋಟಿ ಒಡ್ಡಲು ಕಾಂಗ್ರೆಸ್ ನಿರ್ಧರಿಸಿದ್ದು, ವಿಕ್ರಮ್ ಮಸ್ತಲ್ ಅವರನ್ನು ಕಣಕ್ಕಿಳಿಸಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ನವೆಂಬರ್ 17ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 3ರಂದು ಮತ ಎಣಿಕೆ ನಡೆಯಲಿದೆ.