ನವದೆಹಲಿ: ಸೂರತ್ ಮತ್ತು ಇಂದೋರ್ ಲೋಕಸಭಾ ಕ್ಷೇತ್ರಗಳಲ್ಲಿ ತಾನು ಕಣಕ್ಕಿಳಿಸಿದ್ದ ಅಭ್ಯರ್ಥಿಗಳನ್ನು ಹೆದರಿಸಿ ನಾಮಪತ್ರ ವಾಪಸ್ ತೆಗೆಸಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಬಿಜೆಪಿಯ ಭದ್ರಕೋಟೆ ಎನಿಸಿರುವ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಪ್ರಧಾನಿ ಮೋದಿ ಅವರಿಗೆ ಭಯ ಏಕೆ ಎಂದು ಪಕ್ಷವು ಪ್ರಶ್ನಿಸಿದೆ.
ಮಧ್ಯಪ್ರದೇಶದ ಇಂದೋರ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಬಮ್ ಅವರು ಸೋಮವಾರ ನಾಮಪತ್ರ ವಾಪಸ್ ಪಡೆದಿದ್ದರು. ಅದಕ್ಕೂ ಕೆಲದಿನಗಳ ಮುನ್ನ ಗುಜರಾತ್ನ ಸೂರತ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡಿದ್ದರಿಂದ, ಅಲ್ಲಿ ಬಿಜೆಪಿ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದರು.
‘ಕಾಂಗ್ರೆಸ್ ಪಕ್ಷವು 1984ರ ಬಳಿಕ ಸೂರತ್ ಮತ್ತು ಇಂದೋರ್ ಲೋಕಸಭಾ ಕ್ಷೇತ್ರಗಳಲ್ಲಿ ಗೆದ್ದೇ ಇಲ್ಲ. ಆದರೂ ಈ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆದರಿಸಿ ಕಣದಿಂದ ಹಿಂದೆ ಸರಿಯುವಂತೆ ಮಾಡಲಾಗಿದೆ. ತನ್ನ ಸಾಂಪ್ರದಾಯಿಕ ಭದ್ರಕೋಟೆ ಎನಿಸಿರುವ ಕ್ಷೇತ್ರಗಳಲ್ಲೂ ಬಿಜೆಪಿಗೆ ಭಯ ಏಕೆ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ‘ಎಕ್ಸ್’ನಲ್ಲಿ ಪ್ರಶ್ನಿಸಿದ್ದಾರೆ.