ಮಾಲ್ಡಾ (ಪಶ್ಚಿಮ ಬಂಗಾಳ): ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಗೆದ್ದು ಪಕ್ಷ ಅಧಿಕಾರಕ್ಕೆ ಬಂದರೆ ರಾಷ್ಟ್ರವ್ಯಾಪಿ ಜಾತಿಗಣತಿ ನಡೆಸಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.
ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಭಾರತ್ ಜೋಡೊ ನ್ಯಾಯಾ ಯಾತ್ರೆಯ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್, ‘ಆರ್ಎಸ್ಎಸ್ ಮತ್ತು ಬಿಜೆಪಿ ದ್ವೇಷ ಮತ್ತು ಹಿಂಸೆಯನ್ನು ಹರಡುತ್ತಿದೆ’ ಎಂದು ಆರೋಪಿಸಿದರು.
‘ನಮಗೆ ಬೇಕಿರುವುದು ಸಾಮಾಜಿಕ ನ್ಯಾಯ. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ರಾಷ್ಟ್ರವ್ಯಾಪಿ ಜಾತಿಗಣತಿ ನಡೆಸುತ್ತದೆ. ದಲಿತರು ಮತ್ತು ಇತರೆ ಹಿಂದುಳಿದ ಸಮುದಾಯಗಳ ಜನಸಂಖ್ಯೆಯನ್ನು ಕಂಡುಹಿಡಿಯಲು ಇದು ಸಹಕಾರಿ’ ಎಂದು ಹೇಳಿದರು.
‘ಅನ್ಯಾಯದಿಂದ ದೇಶ ತತ್ತರಿಸಿದ್ದು, ಈ ಅನ್ಯಾಯದ ವಿರುದ್ಧ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಅದಕ್ಕಾಗಿ ನ್ಯಾಯ ಎನ್ನುವ ಪದವನ್ನು ಭಾರತ್ ಜೋಡೊ ಯಾತ್ರೆಗೆ ಸೇರಿಸಲಾಗಿದೆ’ ಎಂದು ತಿಳಿಸಿದರು.